ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನುಗ್ಗಿ ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು, ಮದುವೆ ಸಿದ್ಧತೆಯಲ್ಲಿದ್ದ ಯುವಕ ದುರಂತ ಸಾವು

11-04-26 12:04 pm       HK News Desk   ಕ್ರೈಂ

ಧಾರವಾಡ ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಹುಬ್ಬಳ್ಳಿ, ಎಪ್ರಿಲ್ 11: ಧಾರವಾಡ ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮದುವೆ ಸಿದ್ಧತೆಯಲ್ಲಿದ್ದ ಅವರನ್ನು ನಗರದ ಹಾಶ್ಮಿ ನಗರದ ನಿವಾಸದಲ್ಲಿ ಶುಕ್ರವಾರ ರಾತ್ರಿ ಬರ್ಬರವಾಗಿ ಕಡಿದು ಕೊಲೆ ಮಾಡಲಾಗಿದೆ. 

ಈ ಹಿಂದೆ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಫೈರೋಜ್ ಪಠಾಣ್, ಬಳಿಕ ಯುವ ಕಾಂಗ್ರೆಸ್‌ನಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದರು. ಶುಕ್ರವಾರ ರಾತ್ರಿ ಅವರು ತಮ್ಮ ಮನೆಯಲ್ಲಿದ್ದ ಸಂದರ್ಭದಲ್ಲಿ ಮಾರಕಾಸ್ತ್ರಗಳೊಂದಿಗೆ ನುಗ್ಗಿದ ಆರು ಮಂದಿಯ ತಂಡವು ಮನೆಯವರ ಎದುರಲ್ಲೇ ಕೊಲೆ ಕೃತ್ಯವೆಸಗಿದೆ. ಏಕಾಏಕಿ ದಾಳಿ ಮಾಡಿದ ಆರೋಪಿಗಳು, ತಡೆಯಲು ಬಂದ ಮನೆಯವರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಉಪ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ದುಷ್ಕರ್ಮಿಗಳ ಮಾಹಿತಿ ಕಲೆಹಾಕಿದ್ದಾರೆ.‌

ಕ್ಷಿಪ್ರ ಕಾರ್ಯಾಚರಣೆಯಲ್ಲಿ ಕೊಲೆಗೆ ಸಂಚು ರೂಪಿಸಿದ್ದಾರೆ ಎನ್ನಲಾದ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯಲ್ಲಿ ನೇರವಾಗಿ ಭಾಗಿಯಾಗಿರುವ ಮೊಹಮ್ಮದ್ ಶಾ, ಸದ್ದಾಂ, ಗೌಸ್ ಮತ್ತು ಪರ್ವೇಜ್ ಎಂಬವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿಯೇ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಇದೇ ಎಪ್ರಿಲ್ 26ರಂದು ಫೈರೋಜ್ ಮದುವೆ ನಿಗದಿಯಾಗಿತ್ತು.‌