ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ, ಮೂವರ ಬಂಧನ, ಓರ್ವ ಯುವತಿಯ ರಕ್ಷಣೆ

11-05-26 01:06 pm       HK News Staffer   ಕ್ರೈಂ

ಮೆಸ್ಕಾಂ ಕಚೇರಿ ಸಮೀಪದ ಕ್ಯಾಂಟೀನ್ ಒಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೆಳ್ತಂಗಡಿ ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸ, ಓರ್ವ ಮಹಿಳೆಯನ್ನು ರಕ್ಷಿಸಿದ್ದಾರೆ.

ಬೆಳ್ತಂಗಡಿ, ಮೇ 11: ಮೆಸ್ಕಾಂ ಕಚೇರಿ ಸಮೀಪದ ಕ್ಯಾಂಟೀನ್ ಒಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೆಳ್ತಂಗಡಿ ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸ, ಓರ್ವ ಮಹಿಳೆಯನ್ನು ರಕ್ಷಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಂಟೀನ್ ಮಾಲೀಕ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ (55), ನಾವೂರು ನಿವಾಸಿ ಹುಸ್ಮಾನ್ (38) ಹಾಗೂ ತಣ್ಣೀರುಪಂತ ಗ್ರಾಮದ ಕಲ್ಲೇರಿ ನಿವಾಸಿ ಹೈದಾರ್ (45) ಅನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಸುಂದರ್ ಶೆಟ್ಟಿ ಕಳೆದ ಸುಮಾರು 20 ವರ್ಷಗಳಿಂದ ಬೆಳ್ತಂಗಡಿಯ ಮೆಸ್ಕಾಂ ಕಚೇರಿ ಬಳಿ ಕ್ಯಾಂಟೀನ್ ನಡೆಸುತ್ತಿದ್ದ. ಕ್ಯಾಂಟೀನ್‌ಗೆ ಪ್ರತಿ ಭಾನುವಾರ ರಜೆ ಇರುತ್ತಿತ್ತು. ಹೊರಗೆ ರಜೆ ಎಂದು ತೋರಿಸಿಕೊಂಡರೂ, ಒಳಗಡೆ ಬೆಡ್‌ರೂಂ ಮತ್ತು ಶೌಚಾಲಯದ ವ್ಯವಸ್ಥೆ ಮಾಡಿಕೊಂಡು ಗುಪ್ತವಾಗಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂದು ತನಿಖೆಯಿಂದ ಬಯಲಾಗಿದೆ.

ಈ ಕುರಿತು ಬೆಳ್ತಂಗಡಿ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದ್ದ ಹಿನ್ನೆಲೆಯಲ್ಲಿ ಮೇ 10ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದರು. ದಾಳಿಯ ವೇಳೆ ದಂಧೆಯಲ್ಲಿ ತೊಡಗಿದ್ದ ಆರೋಪಿಗಳನ್ನು ವಶಕ್ಕೆ ಪಡೆದು, 29 ವರ್ಷದ ಸಂತ್ರಸ್ತ ಮಹಿಳೆಯನ್ನು ರಕ್ಷಿಸಲಾಗಿದೆ.

ಸ್ಥಳದಿಂದ ನಗದು ಹಣ, ಮೊಬೈಲ್ ಫೋನ್‌ಗಳು ಹಾಗೂ ಇನ್ನಿತರ ಆಕ್ಷೇಪಾರ್ಹ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷಾ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.