ಪಬ್‌ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ ಏರಿಸಿದ 15 ವರ್ಷದ ಮಗ, ಗಂಗಾವತಿಯಲ್ಲಿ ಭೀಕರ ಕೊಲೆಗೆ ಬೆಚ್ಚಿಬಿದ್ದ ಜನ

08-06-26 02:20 pm       HK News Staffer   ಕ್ರೈಂ

ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ನಡೆದ ಭೀಕರ ಘಟನೆ ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಪಿಯುಸಿ ಓದುತ್ತಿದ್ದ ಸಾಯಿ ವೆಂಕಟಮಣಿ (18) ಎಂಬ ಯುವಕ ಮಾನಸಿಕ ನಿಯಂತ್ರಣ ಕಳೆದುಕೊಂಡು ತನ್ನ ತಂದೆ-ತಾಯಿ ಹಾಗೂ ಅಕ್ಕ ಸೇರಿದಂತೆ ಕುಟುಂಬಸ್ಥರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಆರೋಪ ಎದುರಿಸುತ್ತಿದ್ದಾನೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊಪ್ಪಳ, ಜೂನ್ 8:  ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ನಡೆದ ಭೀಕರ ಘಟನೆ ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಪಿಯುಸಿ ಓದುತ್ತಿದ್ದ ಸಾಯಿ ವೆಂಕಟಮಣಿ (18) ಎಂಬ ಯುವಕ ಮಾನಸಿಕ ನಿಯಂತ್ರಣ ಕಳೆದುಕೊಂಡು ತನ್ನ ತಂದೆ-ತಾಯಿ ಹಾಗೂ ಅಕ್ಕ ಸೇರಿದಂತೆ ಕುಟುಂಬಸ್ಥರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಆರೋಪ ಎದುರಿಸುತ್ತಿದ್ದಾನೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯು ಆನ್‌ಲೈನ್ ಪಬ್‌ಜಿ ಗೇಮ್ ವ್ಯಸನಿಯಾಗಿದ್ದು, ಈ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ರಾತ್ರಿ ಸುಮಾರು 10 ಗಂಟೆಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಮಗನ ದಾಳಿಯಲ್ಲಿ ತಾಯಿ ಸೌಜನ್ಯ (40), ಅಕ್ಕ ಪ್ರಗತಿ (19) ಹಾಗೂ ತಂದೆ ವೆಂಕಟ ನಾಯ್ಡು ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆದಿದೆ. ಬಳಿಕ ಆರೋಪಿಯು ತಾನೂ ತನ್ನ ಮೇಲೆ ಚಾಕುವಿನಿಂದ ಇರಿದುಕೊಂಡಿರುವ ಮಾಹಿತಿ ಲಭ್ಯವಾಗಿದೆ. ತೀವ್ರ ರಕ್ತಸ್ರಾವದಿಂದ ಅಕ್ಕ ಪ್ರಗತಿ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೂಡ ಸಾವನ್ನಪ್ಪಿದ್ದಾರೆ. ತಾಯಿ ಸೌಜನ್ಯ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದ ತಕ್ಷಣ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್. ಅರಸಿದ್ಧಿ, ಡಿವೈಎಸ್ಪಿ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ತನಿಖೆಯ ವಿವರ ನೀಡಿರುವ ಎಸ್‌ಪಿ ರಾಮ್ ಎಲ್. ಅರಸಿದ್ಧಿ ಪ್ರಕಾರ, ಶನಿವಾರ ಸಂಜೆ ಕುಟುಂಬ ಸದಸ್ಯರು ಸಾಮಾನ್ಯ ದಿನಚರಿಯಂತೆ ಒಟ್ಟಿಗೆ ಊಟ ಮಾಡಿದ್ದರು. ನಂತರ ರಾತ್ರಿ ಸುಮಾರು 10 ಗಂಟೆಗೆ ಮನೆಯಲ್ಲಿ ಜೋರಾದ ಶಬ್ಧ ಕೇಳಿಬಂದಿದೆ. ಮನೆಯ ಹಿರಿಯರು ಬಾಗಿಲು ತೆರೆದಾಗ ನಾಲ್ವರೂ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ತಕ್ಷಣ ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಪ್ರಗತಿ ಮೃತಪಟ್ಟಿರುವುದು ದೃಢಪಟ್ಟಿದೆ. ನಂತರ ಇತರರನ್ನು ಬಳ್ಳಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಭಾನುವಾರ ಬೆಳಗ್ಗೆ ವೆಂಕಟ ನಾಯ್ಡು ಕೂಡ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳ ಹೇಳಿಕೆಯ ಪ್ರಕಾರ, ಮಲಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಲೈಟ್ ಆಫ್ ಮಾಡಿ ಏಕಾಏಕಿ ಚಾಕುವಿನಿಂದ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ತಾತ ನೀಡಿದ ದೂರಿನ ಆಧಾರದಲ್ಲಿ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಮೊಮ್ಮಗನ ಮೇಲೆಯೇ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.