ಯಲ್ಲಾಪುರ ಅರಬೈಲ್ ಘಾಟ್‌ನಲ್ಲಿ ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿ; ಪ್ರವಾಸಕ್ಕೆ ಹೊರಟ್ಟಿದ್ದ ಏಳು ಧಾರವಾಡ ಮೂಲದ ಯುವಕರ ಬಲಿ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

09-07-26 11:38 am       HK News Staffer   ಕ್ರೈಂ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆಯೇ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಸಮೀಪ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಮೂಲದ ಏಳು ಯುವಕರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವಾಸದ ಸಂಭ್ರಮಕ್ಕೆ ಹೊರಟಿದ್ದ ಯುವಕರ ತಂಡ ಕ್ಷಣಾರ್ಧದಲ್ಲಿ ದುರಂತಕ್ಕೆ ಸಿಲುಕಿದ್ದು, ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಕಾರವಾರ, ಜು.9: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆಯೇ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಸಮೀಪ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಮೂಲದ ಏಳು ಯುವಕರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವಾಸದ ಸಂಭ್ರಮಕ್ಕೆ ಹೊರಟಿದ್ದ ಯುವಕರ ತಂಡ ಕ್ಷಣಾರ್ಧದಲ್ಲಿ ದುರಂತಕ್ಕೆ ಸಿಲುಕಿದ್ದು, ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಧಾರವಾಡದಿಂದ ಧರ್ಮಸ್ಥಳ ಹಾಗೂ ಚಿಕ್ಕಮಗಳೂರಿನ ಪ್ರವಾಸಕ್ಕೆ ಬುಧವಾರ ರಾತ್ರಿ ತೂಫಾನ್ ಕ್ರೂಸರ್ ವಾಹನದಲ್ಲಿ ಒಟ್ಟು 10 ಮಂದಿ ಹೊರಟಿದ್ದರು. ಮುಂಜಾನೆ ಯಲ್ಲಾಪುರದ ಅರಬೈಲ್ ಘಾಟ್ ತಲುಪುತ್ತಿದ್ದಾಗ ಎದುರಿನಿಂದ ಬಂದ ಲಾರಿಗೆ ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ (26), ಅಭಿಷೇಕ್ (26), ಸಂಜಯ್ ಅಂಗಡಿ ಹಾಗೂ ಮತ್ತೋರ್ವ ಯುವಕ ಎಂದು ಗುರುತಿಸಲಾಗಿದೆ. ಶಿವರಾಜ್ ದುರ್ಗಪ್ಪ ಮಡಿವಾಳ್ (22), ಮಂಜುನಾಥ್ ಅಶೋಕ್ ಚುಲಕಿ (32), ಸಚಿನ್ ಹಾಗೂ ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28)  ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯಂತೆ, ಮೃತರು ಮತ್ತು ಗಾಯಾಳುಗಳೆಲ್ಲರೂ ಧಾರವಾಡ ಮೂಲದವರಾಗಿದ್ದು, ಬೆಂಗಳೂರಿನ ಖಾಸಗಿ ಆಹಾರ ವಿತರಣಾ ಸಂಸ್ಥೆಯೊಂದರಲ್ಲಿ ಪಾರ್ಟ್‌ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು. ಬಿಡುವಿನ ವೇಳೆಯಲ್ಲಿ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಅವರು ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿರುವುದು ಕುಟುಂಬಗಳನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಹಾಗೂ ಕ್ರೂಸರ್ ನಡುವಿನ ಈ ಭೀಕರ ಡಿಕ್ಕಿಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನೆ ನಡೆದ ಅರಬೈಲ್ ಘಾಟ್ ಪ್ರದೇಶದಲ್ಲಿ ಮಳೆ ಮುಂದುವರಿದಿರುವುದರಿಂದ ರಸ್ತೆ ಜಾರುವ ಸ್ಥಿತಿಯಲ್ಲಿದ್ದು, ವಾಹನ ಸವಾರರು ಹೆಚ್ಚಿನ ಎಚ್ಚರಿಕೆಯಿಂದ ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಧಾರವಾಡದಲ್ಲಿ ಮೃತರ ಸಾವಿನ ಸುದ್ದಿ ತಲುಪುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರವಾಸದ ಸಂಭ್ರಮ ದುರಂತವಾಗಿ ಅಂತ್ಯಗೊಂಡಿದೆ.