ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನಿ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ; ಪೊಲೀಸರಿಂದ ತನಿಖೆ

15-07-26 01:17 pm       HK News Staffer   ಕ್ರೈಂ

ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮುಕ್ಕ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ, ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (21) ಮೃತಪಟ್ಟ ವಿದ್ಯಾರ್ಥಿನಿ.

ಮಂಗಳೂರು,ಜು. 15: ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮುಕ್ಕ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ, ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (21) ಮೃತಪಟ್ಟ ವಿದ್ಯಾರ್ಥಿನಿ.

ಸುರತ್ಕಲ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಮಹಾಲಕ್ಷ್ಮೀ, ತಾವು ವಾಸವಿದ್ದ ಕಟ್ಟಡದ ಐದನೇ ಮಹಡಿಗೆ ತೆರಳಿ ಅಲ್ಲಿಂದ ಜಿಗಿದಿದ್ದಾಳೆ. ತಕ್ಷಣ ಆಕೆಯನ್ನ ರಕ್ಷಿಸಲು ಪ್ರಯತ್ನಿಸಿದರೂ, ಗಂಭೀರ ಗಾಯಗಳಿಂದ ಮೃತಪಟ್ಟಿದ್ದಾಳೆ.

ಮಾಹಿತಿಯ ಪ್ರಕಾರ, ಮಹಾಲಕ್ಷ್ಮೀ ಈ ಹಿಂದೆಯೂ ಒಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರೆಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಆದರೆ, ಈ ಬಾರಿ ಆಕೆ ಇಂತಹ ಕಠಿಣ ನಿರ್ಧಾರ ಕೈಗೊಂಡಿರುವುದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ವಿದ್ಯಾರ್ಥಿನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಈ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಘಟನೆಯ ವೇಳೆ ಹುಬ್ಬಳ್ಳಿಯಿಂದ ಬಂದಿದ್ದ ಮಹಾಲಕ್ಷ್ಮೀ ಅವರ ಪೋಷಕರು ಕೂಡ ಫ್ಲ್ಯಾಟ್‌ನಲ್ಲೇ ಇದ್ದರು. ಅವರು ಮನೆಯಲ್ಲಿದ್ದಾಗಲೇ ಈ ದುರ್ಘಟನೆ ಸಂಭವಿಸಿರುವುದು ಕುಟುಂಬವನ್ನು ಆಘಾತಕ್ಕೀಡು ಮಾಡಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ವಿದ್ಯಾರ್ಥಿನಿ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ದೃಢಪಡಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣದ ಒತ್ತಡ, ಮಾನಸಿಕ ಆರೋಗ್ಯ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಶವಪರೀಕ್ಷೆ ವರದಿ ಹಾಗೂ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.