ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್ಮಿಕರ ದುರ್ಮರಣ, ಹಲವರಿಗೆ ಗಂಭೀರ ಗಾಯ

18-07-26 07:21 pm       HK News Staffer   ಕ್ರೈಂ

ಗುಜರಾತ್‌ನ ಅಹಮದಾಬಾದ್ ನಗರದ ವಸ್ತ್ರಾಲ್ ಪ್ರದೇಶದಲ್ಲಿರುವ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 8 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಬಹುಭಾಗ ಧ್ವಂಸಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಹಮದಾಬಾದ್, ಜುಲೈ 19: ಗುಜರಾತ್‌ನ ಅಹಮದಾಬಾದ್ ನಗರದ ವಸ್ತ್ರಾಲ್ ಪ್ರದೇಶದಲ್ಲಿರುವ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 8 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಬಹುಭಾಗ ಧ್ವಂಸಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಪರವಾನಗಿ ರದ್ದಾದರೂ ಅಕ್ರಮವಾಗಿ ನಡೆಯುತ್ತಿತ್ತು ಉತ್ಪಾದನೆ

ಪ್ರಾಥಮಿಕ ಮಾಹಿತಿಯ ಪ್ರಕಾರ, 'ಟ್ಯಾಲೆಂಟ್ ಫೈರ್‌ವರ್ಕ್ಸ್' ಹೆಸರಿನ ಪಟಾಕಿ ಕಾರ್ಖಾನೆಯ ಪರವಾನಗಿಯನ್ನು ಈಗಾಗಲೇ ರದ್ದುಗೊಳಿಸಲಾಗಿತ್ತು. ಆದರೂ, ಖಾಸಗಿ ಜಾಗದಲ್ಲಿ ಅಕ್ರಮವಾಗಿ ಪಟಾಕಿ ತಯಾರಿಕೆ ಮುಂದುವರಿಸಲಾಗುತ್ತಿತ್ತು ಎನ್ನಲಾಗಿದೆ. ಇದೇ ವೇಳೆ ಸಂಭವಿಸಿದ ಪ್ರಬಲ ಸ್ಫೋಟದಿಂದ ಕಾರ್ಖಾನೆ ಸಂಪೂರ್ಣ ನಾಶವಾಗಿದ್ದು, ಒಳಗಿದ್ದ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದರು.

ಘಟನೆ ನಡೆದ ಸ್ಥಳದ ಸಮೀಪದಲ್ಲೇ ರಾಪಿಡ್ ಆಕ್ಷನ್ ಫೋರ್ಸ್ ಶಿಬಿರವಿದ್ದ ಕಾರಣ, ಸಿಬ್ಬಂದಿ ಅಗ್ನಿಶಾಮಕ ದಳದೊಂದಿಗೆ ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅವಶೇಷಗಳಡಿ ಸಿಲುಕಿದ್ದವರನ್ನು ಹೊರತೆಗೆದು ಎಲ್.ಜಿ. ಆಸ್ಪತ್ರೆ ಹಾಗೂ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ;

ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಅಧಿಕೃತ X ಖಾತೆಯಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಧನಸಹಾಯ ಘೋಷಿಸಲಾಗಿದೆ.

ಕಾರ್ಖಾನೆ ಮಾಲೀಕನ ವಿರುದ್ಧ FIR

ಪರವಾನಗಿ ರದ್ದಾದ ಬಳಿಕವೂ ಅಕ್ರಮವಾಗಿ ಪಟಾಕಿ ಉತ್ಪಾದನೆ ನಡೆಸಿದ್ದ ಆರೋಪದಡಿ ಕಾರ್ಖಾನೆ ಮಾಲೀಕ ಮೆಹುಲ್ ದೋಡಿಯಾ ವಿರುದ್ಧ ಪೊಲೀಸರು ಸ್ಫೋಟಕ ವಸ್ತುಗಳ ಕಾಯ್ದೆ ಸೇರಿದಂತೆ ವಿವಿಧ ಕಾನೂನುಗಳಡಿ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.