ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ; ಕಚೇರಿಗೆ ನುಗ್ಗಿ ಅಧಿಕಾರಿಯ ಗ್ರಹಚಾರ ಬಿಡಿಸಿದ ಪ್ರತಿಭಾ ಕುಳಾಯಿ ನೇತೃತ್ವದ ಮಹಿಳಾ ತಂಡ

27-07-26 01:09 pm       HK News Staffer   ಕ್ರೈಂ

ಮಂಗಳೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಚೇರಿಯಲ್ಲಿ ಡಿ ಗ್ರೂಪ್ ಮಹಿಳಾ ಉದ್ಯೋಗಿಗೆ ಎಪಿಎಂಸಿ ಕಾರ್ಯದರ್ಶಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ನೇತೃತ್ವದ ಮಹಿಳಾ ತಂಡ ಕಚೇರಿಗೆ ದಿಢೀರ್ ಭೇಟಿ ನೀಡಿ ಕಾರ್ಯದರ್ಶಿ ಸಿ.ಎಚ್. ಮೋಹನ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಮಂಗಳೂರು, ಜುಲೈ 27: ಮಂಗಳೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಚೇರಿಯಲ್ಲಿ ಡಿ ಗ್ರೂಪ್ ಮಹಿಳಾ ಉದ್ಯೋಗಿಗೆ ಎಪಿಎಂಸಿ ಕಾರ್ಯದರ್ಶಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ನೇತೃತ್ವದ ಮಹಿಳಾ ತಂಡ ಕಚೇರಿಗೆ ದಿಢೀರ್ ಭೇಟಿ ನೀಡಿ ಕಾರ್ಯದರ್ಶಿ ಸಿ.ಎಚ್. ಮೋಹನ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಮಹಿಳಾ ಉದ್ಯೋಗಿಗೆ ಕಾರ್ಯದರ್ಶಿ ಸಿ.ಎಚ್. ಮೋಹನ್ ಪದೇ ಪದೇ ಕಿರುಕುಳ ನೀಡುತ್ತಿದ್ದರೆಂಬ ಆರೋಪ ಕೇಳಿಬಂದಿದ್ದು, ಹಣದ ಆಮಿಷ ಒಡ್ಡಿ ಲೈಂಗಿಕವಾಗಿ ಕಿರುಕುಳ ನೀಡಲು ಯತ್ನಿಸಿದ್ದಾರೆಯೆಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಅಷ್ಟೇ ಅಲ್ಲದೆ, ಸೋಮವಾರ ಕಚೇರಿಗೆ "ಹಸಿರು ಸೀರೆ ಧರಿಸಿ ಬನ್ನಿ" ಎಂದು ಮಹಿಳಾ ಉದ್ಯೋಗಿಗೆ ಸೂಚನೆ ನೀಡಿದ್ದರೆಂಬ ಆರೋಪವೂ ವ್ಯಕ್ತವಾಗಿದೆ. ಈ ಆರೋಪದ ಬೆನ್ನಲ್ಲೇ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ನೇತೃತ್ವದ ಮಹಿಳಾ ತಂಡ ಸೋಮವಾರವೇ ಹಸಿರು ಸೀರೆ ಧರಿಸಿ ಎಪಿಎಂಸಿ ಕಚೇರಿಗೆ ಆಗಮಿಸಿತು. ಕಚೇರಿಗೆ ಪ್ರವೇಶಿಸಿದ ಮಹಿಳೆಯರು, "ನೀವು ಹೇಳಿದಂತೆ ಹಸಿರು ಸೀರೆ ಹಾಕಿಕೊಂಡು ಬಂದಿದ್ದೇವೆ... ಈಗ ಹೇಳಿ" ಎಂದು ಕಾರ್ಯದರ್ಶಿಯನ್ನು ನೇರವಾಗಿ ಪ್ರಶ್ನಿಸಿ ತೀವ್ರ ತರಾಟೆಗೆ ತೆಗೆದುಕೊಂಡರು.

ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಬಗ್ಗೆ ಸ್ಪಷ್ಟನೆ ಕೇಳಿದ ಮಹಿಳಾ ತಂಡ, ಸರ್ಕಾರಿ ಕಚೇರಿಗಳಲ್ಲಿ ಮಹಿಳಾ ಸಿಬ್ಬಂದಿಯ ಗೌರವ ಮತ್ತು ಸುರಕ್ಷತೆಗೆ ಧಕ್ಕೆ ತರುವಂತಹ ವರ್ತನೆ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿತು.

ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳಾ ತಂಡ ಒತ್ತಾಯಿಸಿದೆ.