ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ನಲ್ಲಿ ಭ್ರಷ್ಟಾಚಾರ ; 20 ಸಾವಿರ ಸಾಲ ಕೊಟ್ಟು 2 ಲಕ್ಷದ ಸಾಲಪತ್ರ ಸೃಷ್ಟಿ, ವ್ಯವಸ್ಥಾಪಕರ ವ್ಯವಸ್ಥಿತ ಕೊಲೆ, ಸಮಗ್ರ ತ‌ನಿಖೆಗೆ ಎಸ್ಐಟಿ ರಚಿಸಿ ; ಅಧಿವೇಶನದಲ್ಲಿ ಬಿಕೆ ಹರಿಪ್ರಸಾದ್ ಆಗ್ರಹ

20-08-26 01:58 pm       HK News Staffer   ಕ್ರೈಂ

ಉಡುಪಿ ಜಿಲ್ಲೆಯ ಮಲ್ಪೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡವನ್ನು(ಎಸ್‍ಐಟಿ) ರಚನೆ ಮಾಡುವ ಬಗ್ಗೆ ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಭರವಸೆ ನೀಡಿದ್ದಾರೆ.

ಬೆಂಗಳೂರು, ಆ.20: ಉಡುಪಿ ಜಿಲ್ಲೆಯ ಮಲ್ಪೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡವನ್ನು(ಎಸ್‍ಐಟಿ) ರಚನೆ ಮಾಡುವ ಬಗ್ಗೆ ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಭರವಸೆ ನೀಡಿದ್ದಾರೆ.

ಬುಧವಾರ ಪರಿಷತ್ತಿನಲ್ಲಿ ಕಾಂಗ್ರೆಸ್‍ ಸದಸ್ಯ ಬಿ.ಕೆ.ಹರಿಪ್ರಸಾದ್ ನಿಯಮ-330ರಡಿ ಪ್ರಸ್ತಾಪಿಸಿದ ಸೂಚನೆಗೆ ಉತ್ತರಿಸಿದ ಅವರು, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ದೂರುಗಳು ಸಲ್ಲಿಕೆಯಾಗಿದ್ದು, ಮೇಲ್ನೋಟಕ್ಕೆ ಅಕ್ರಮ ನಡೆದಿರುವುದು ಗೊತ್ತಾಗಿದೆ. ವಂಚನೆ ಹಾಗೂ ಮ್ಯಾನೇಜರ್ ಸಾವಿನ ಪ್ರಕರಣವನ್ನು ಎಸ್‍ಐಟಿಗೆ ವಹಿಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಬಿ.ಕೆ.ಹರಿಪ್ರಸಾದ್, ಉಡುಪಿಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‍ನಲ್ಲಿ ಸಾಲದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆದಿದೆ. ಅಲ್ಲದೆ ಮ್ಯಾನೇಜರ್ ಆಗಿದ್ದ ಸುಬ್ಬಣ್ಣ ಎಂಬುವರ ಕೊಲೆಯಾಗಿದೆ. ಕೃತ್ಯದ ಹಿಂದೆ ಬ್ಯಾಂಕ್ ಅಧ್ಯಕ್ಷ ಹಾಗೂ ಬಿಜೆಪಿ ಶಾಸಕರಾಗಿರುವ ಯಶ್‍ಪಾಲ್ ಸುವರ್ಣ ಅವರ ಪಾತ್ರವಿದೆ. ಹೀಗಾಗಿ ತನಿಖೆಯನ್ನು ಎಸ್‍ಐಟಿಗೆ ವಹಿಸಬೇಕು ಎಂದು ಆಗ್ರಹಿಸಿದರು. 

ಉಡುಪಿ ಜಿಲ್ಲೆಯ ಇತಿಹಾಸದಲ್ಲಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‍ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಫಲಾನುಭವಿಗಳಿಗೆ 20 ಸಾವಿರ ಸಾಲ ನೀಡಿ ಅವರಿಂದ ದಾಖಲಾತಿ ಪಡೆದು 2 ಲಕ್ಷ ರೂ. ಸಾಲ ನೀಡಿರುವ ರೀತಿ ಸಾಲದ ಪತ್ರ ಸೃಷ್ಟಿಸಿದ್ದಾರೆ. ಈ ರೀತಿ 25 ಕೋಟಿ ರೂ.ಗೂ ಅಧಿಕ ಅಕ್ರಮವಾಗಿ ಸಾಲ ಪಡೆಯಲಾಗಿದೆ ಎಂದು ಅವರು ಆರೋಪಿಸಿದರು.

ವಂಚನೆ ಬೆಳಕಿಗೆ ಬರುತ್ತಿದ್ದಂತೆ ಮಲ್ಪೆಯ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಬ್ಬಣ್ಣ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಇದು ಆತ್ಮಹತ್ಯೆಯಲ್ಲ. ಇದೊಂದು ವ್ಯವಸ್ಥಿತ ಕೊಲೆ. ಇದರ ಹಿಂದೆ ಸ್ಥಳೀಯ ಶಾಸಕರ ಕೈವಾಡವಿದೆ. ಸಮಗ್ರ ತನಿಖೆಗಾಗಿ ಎಸ್‍ಐಟಿ ರಚಿಸಬೇಕು ಹಾಗೂ ಬ್ಯಾಂಕ್‍ಗೆ ಕೂಡಲೇ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು. ಸಚಿವರ ಪರವಾಗಿ ಉತ್ತರಿಸಿದ ಸಭಾನಾಯಕ ಡಾ.ಯತೀಂದ್ರ ಸಿದ್ದರಾಮಯ್ಯ, ನಕಲಿ ದಾಖಲಾತಿ ಸೃಷ್ಟಿಸಿ ಸಾಲ ಪಡೆದವರ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡಿಸಲಾಗುವುದು. ಬ್ಯಾಂಕ್ ವ್ಯವಹಾರ ಕುರಿತು ನಿಗಾ ವಹಿಸಲಾಗುವುದು ಎಂದು ಹೇಳಿದರು.