Reservation for Muslims, Siddaramaiah, BJP: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ; ವಿಧೇಯಕ ತರಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ, ಧರ್ಮಾಧರಿತ ಮೀಸಲು ಸಂವಿಧಾನ ವಿರೋಧಿ ಎಂದು ಬಿಜೆಪಿ ಟೀಕೆ 

16-03-25 12:11 pm       Bangalore Correspondent   ಕರ್ನಾಟಕ

ಸಾಮಾಜಿಕ ನ್ಯಾಯದ ಹೆಸರಲ್ಲಿ ರಾಜ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4 ಶೇ. ಮೀಸಲಾತಿ ನೀಡುವ ವಿಧೇಯಕ ಜಾರಿಗೆ ತರಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು, ಮಾ.16: ಸಾಮಾಜಿಕ ನ್ಯಾಯದ ಹೆಸರಲ್ಲಿ ರಾಜ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4 ಶೇ. ಮೀಸಲಾತಿ ನೀಡುವ ವಿಧೇಯಕ ಜಾರಿಗೆ ತರಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಇದಕ್ಕೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದ್ದು ಇದೇ ಅಧಿವೇಶನದಲ್ಲಿ ಅನುಮೋದನೆ ಪಡೆಯಲು ಸಿದ್ಧತೆ ನಡೆದಿದೆ. ಒಂದು ಕೋಟಿ ರೂಪಾಯಿ ವರೆಗಿನ ಕಾಮಗಾರಿಗಳಿಗೆ ಈ ಮೀಸಲಾತಿ ಅನ್ವಯಿಸಲಿದೆ. ಹಿಂದುಳಿದ ವರ್ಗಗಳಿಗೆ ಇದ್ದ ಮೀಸಲಾತಿಯನ್ನು ವಿಸ್ತರಿಸಿ ಮುಸ್ಲಿಂ ಸಮುದಾಯಕ್ಕೂ ನೀಡಲಾಗಿದೆ. 

ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದವರಿಗೆ ನೀಡಿದ ರೀತಿಯಲ್ಲೇ ಮುಸ್ಲಿಮರಿಗೆ ಅಂದರೆ ಪ್ರವರ್ಗ 2 ಬಿ ಅಡಿ ಶೇಕಡ 4ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಗುತ್ತಿಗೆ ಕಾಮಗಾರಿಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಜನಾಂಗಕ್ಕೆ ಹಾಗೂ ಹಿಂದುಳಿದ ಸಮುದಾಯವರಿಗೆ ಮೀಸಲಾತಿ ನೀಡಿದ ಮಾದರಿಯಲ್ಲಿ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೂ ಶೇ 4ರಷ್ಟು ಮೀಸಲಾತಿ ನೀಡಬೇಕೆಂದು ಅಲ್ಪಸಂಖ್ಯಾತ ನಾಯಕರು ಮನವಿ ಸಲ್ಲಿಸಿದ್ದನ್ನು ಪರಿಗಣಿಸಿ, ಮೀಸಲಾತಿ ಕಲ್ಪಿಸುವುದಕ್ಕೆ ಸರ್ಕಾರ ಮುಂದಾಗಿದೆ. 

ರಾಜ್ಯ ಕಾಂಗ್ರೆಸ್ ಸರ್ಕಾರದ ಈ ನಡೆಗೆ ಬಿಜೆಪಿ ರಾಷ್ಟ್ರೀಯ ಮುಖಂಡರು ಟೀಕೆ ಮಾಡಿದ್ದಾರೆ.  ಬಿಜೆಪಿ ಸಂಸದ ರವಿಶಂಕರ್‌ ಪ್ರಸಾದ್‌ ಟೀಕಿಸಿದ್ದು, "ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ಕಲ್ಪಿಸುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ತಿಳಿಸಿದ್ದಾರೆ. ನಾವು ಈ ನಿರ್ಧಾರವನ್ನು ವಿರೋಧಿಸುತ್ತೇವೆ. ಭಾರತೀಯ ಸಂವಿಧಾನದ ಅಡಿಯಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವೇ ಇಲ್ಲ. ಆದರೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಸಂವಿಧಾನದ ನಿಯಮಾವಳಿಗಳಿಗೆ ವಿರುದ್ಧವಾಗಿ ಗುತ್ತಿಗೆಯಲ್ಲಿ ಮೀಸಲಾತಿ ಜಾರಿ ಮಾಡಿದೆ. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ ಎಂದೆಲ್ಲಾ ಭಾಷಣ ಮಾಡುವ ಕಾಂಗ್ರೆಸ್‌, ಮೀಸಲಾತಿ ವಿಚಾರದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ರವಿಶಂಕರ್‌ ಪ್ರಸಾದ್‌ ತೀವ್ರ ವಾಗ್ದಾಳಿ ನಡೆಸಿದರು.

ಸರ್ಕಾರಿ ಕಾಮಗಾರಿ ಒಪ್ಪಂದಗಳ ಮೇಲಿನ ಮೀಸಲಾತಿ ಸಂಪೂರ್ಣ ಅಸಂವಿಧಾನಿಕ. ಸಾಮಾಜಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ಇದನ್ನು ಅನುಮತಿಸಬಹುದು. ಆದರೆ ನಿರ್ದಿಷ್ಟ ಧಾರ್ಮಿಕ ಸಮುದಾಯಕ್ಕೆ ನೇರವಾಗಿ ಈ ಮೀಸಲಾತಿ ಅನಕೂಲ ಕಲ್ಪಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ರವಿಶಂಕರ್‌ ಪ್ರಸಾದ್‌ ಹರಿಹಾಯ್ದಿದ್ದಾರೆ.

Reservation for Muslims in government contracts, Siddaramaiah cabinet approves the bill, BJP criticizes it as unconstitutional based on religion.