ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದೆ ಯಾರಿಗೆ ? ಸಚಿವ ಸ್ಥಾನ ಬಿಟ್ಟು ಬರಲೊಪ್ಪದ ಜಾರಕಿಹೊಳಿ, ಕುರ್ಚಿ ಕದನ ಬಳಿಕ ಪಕ್ಷದ ನಿಯಂತ್ರಣಕ್ಕೆ ಫೈಟ್

29-05-26 04:30 pm       HK News Staffer   ಕರ್ನಾಟಕ

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳಿಗೆ ತೆರೆ ಬಿದ್ದಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಕೈ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹಲವು ಹಿರಿಯ ನಾಯಕರು ತೆರೆಮರೆಯಲ್ಲಿ ಇದಕ್ಕಾಗಿ ಲಾಬಿ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದು, ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಸದ್ಯ ಚರ್ಚೆಯಲ್ಲಿದೆ.

ಬೆಂಗಳೂರು, ಮೇ 29: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳಿಗೆ ತೆರೆ ಬಿದ್ದಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಕೈ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹಲವು ಹಿರಿಯ ನಾಯಕರು ತೆರೆಮರೆಯಲ್ಲಿ ಇದಕ್ಕಾಗಿ ಲಾಬಿ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದು, ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಸದ್ಯ ಚರ್ಚೆಯಲ್ಲಿದೆ. 

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಿ.ಪರಮೇಶ್ವರ, ಈಶ್ವರ ಖಂಡ್ರೆ ಹಾಗೂ ರಾಮಲಿಂಗಾ ರೆಡ್ಡಿ ಹೆಸರುಗಳು ಚರ್ಚೆಯಲ್ಲಿದ್ದರೂ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೆಸರೇ ಹೆಚ್ಚು ಚಾಲ್ತಿಯಲ್ಲುದೆ. ಉತ್ತರ ಕರ್ನಾಟಕದಲ್ಲಿ ಪ್ರಭಾವಿ ಅಹಿಂದ ನಾಯಕನಾಗಿರುವ ಜಾರಕಿಹೊಳಿ ಪಕ್ಷದಲ್ಲಿ ತನ್ನದೇ ವರ್ಚಸ್ಸು ಮತ್ತು ಸಿದ್ದರಾಮಯ್ಯ ಅವರ ಅಹಿಂದ ಉತ್ತರಾಧಿಕಾರಿ ಎನ್ನುವ ಹೆಗ್ಗಳಿಕೆ ಹೊಂದಿದ್ದಾರೆ.‌ ಅವರನ್ನು ಪಕ್ಷದ ಸಾರಥಿಯನ್ನಾಗಿಸಲು ಹೈಕಮಾಂಡ್ ನಾಯಕರು ಕೂಡ ಆಸಕ್ತಿ ತೋರಿದ್ದಾರೆ. ಆದರೆ, ಈ ಪ್ರಕ್ರಿಯೆಯಲ್ಲಿ ಹೊಸ ಗೊಂದಲವೂ ಮೂಡಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಚಿವ ಸ್ಥಾನ ತ್ಯಜಿಸಬೇಕು ಎಂಬ ಹೈಕಮಾಂಡ್‌ ಸೂಚನೆ, ಒಬ್ಬರಿಗೆ ಒಂದು ಹುದ್ದೆ ಎಂಬ ನೀತಿಯನ್ನು ಜಾರಿಗೊಳಿಸಲು ಮುಂದಾಗಿರುವುದಕ್ಕೆ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತದೆ. 2023ರ ಚುನಾವಣೆಯ ಬಳಿಕ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿದಿದ್ದರು. ಜಾರಕಿಹೊಳಿ ಬೆಂಬಲಿಗರು ಇದನ್ನೇ ಮುಂದಿಟ್ಟಿದ್ದು ಅಸಮಾನತೆಯ ಪ್ರಶ್ನೆ ಎಬ್ಬಿಸುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ‘ಒಬ್ಬರಿಗೆ ಒಂದು ಹುದ್ದೆ’ ಎಂಬ ತತ್ವವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಬಯಸುತ್ತಿದೆ ಎನ್ನಲಾಗಿದೆ. ಅಧಿಕಾರ ಮತ್ತು ಸಂಘಟನಾ ನಿಯಂತ್ರಣ ಒಬ್ಬರ ಕೈಯಲ್ಲಿ ಇರಬಾರದು ಎಂಬ ಅಭಿಪ್ರಾಯ ಹೈಕಮಾಂಡ್‌ನಲ್ಲಿ ಬಲವಾಗುತ್ತಿದೆ.