ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟಿ ವಿರುದ್ಧವೇ ಚಿನ್ನಯ್ಯ ಹೈಕೋರ್ಟಿಗೆ, ಹೆಗ್ಗಡೆ ವಿರೋಧಿ ಸಂಚಿಗೆ 200 ಕೋಟಿ ಬಜೆಟ್ ! ನಟ ಪ್ರಕಾಶ್‌ ರಾಜ್‌ ಸೇರಿ ಹಲವರ ಹೆಸರು ಉಲ್ಲೇಖ

12-06-26 12:02 pm       HK News Staffer   ಕರ್ನಾಟಕ

ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ವ್ಯಕ್ತಿಯಾಗಿರುವ ಚಿನ್ನಯ್ಯ, ತನ್ನನ್ನು ಬಳಸಿಕೊಂಡು ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ವಿಶೇಷ ತನಿಖಾ ತಂಡ (SIT) ತನಿಖೆ ಶೀಘ್ರ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಹಲವು ಗಂಭೀರ ಆರೋಪಗಳನ್ನು ಮಾಡಲಾಗಿದೆ.

ಬೆಂಗಳೂರು, ಜೂನ್ 12: ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ವ್ಯಕ್ತಿಯಾಗಿರುವ ಚಿನ್ನಯ್ಯ, ತನ್ನನ್ನು ಬಳಸಿಕೊಂಡು ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ವಿಶೇಷ ತನಿಖಾ ತಂಡ (SIT) ತನಿಖೆ ಶೀಘ್ರ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಹಲವು ಗಂಭೀರ ಆರೋಪಗಳನ್ನು ಮಾಡಲಾಗಿದೆ.

ಅರ್ಜಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ., ಅಜಯ್ ಅಂಚನ್, ದಿನೇಶ್ ಸೇರಿದಂತೆ ಹಲವರ ಹೆಸರನ್ನು ಉಲ್ಲೇಖಿಸಲಾಗಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೂ ಪ್ರಸ್ತಾಪವಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ SITಗೆ ನೋಟಿಸ್ ಜಾರಿ ಮಾಡಿ, ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸೂಚಿಸಿದೆ.

ಚಿನ್ನಯ್ಯ ತನ್ನ ಅರ್ಜಿಯಲ್ಲಿ, “ವಿಠಲ್ ಗೌಡ ನನ್ನನ್ನು ಮಹೇಶ್ ಶೆಟ್ಟಿ ತಿಮರೋಡಿಗೆ ಪರಿಚಯಿಸಿದರು. ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಹೇಳುವಂತೆ ಸೂಚನೆ ನೀಡಿದರು. ಬಳಿಕ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಕೆಲವರು ನನ್ನನ್ನು ಕೇರಳ, ತಮಿಳುನಾಡು ಸೇರಿದಂತೆ ವಿವಿಧ ಕಡೆಗಳಿಗೆ ಕರೆದೊಯ್ದು ಹಣ ನೀಡುತ್ತಿದ್ದರು. ನಂತರ ಬೆಂಗಳೂರಿನ ಜಯಂತ್ ಎಂಬವರ ಮನೆಗೆ ಕರೆದುಕೊಂಡು ಹೋಗಿ ತಲೆ ಬುರುಡೆಯೊಂದನ್ನು ಕೈಯಲ್ಲಿ ಹಿಡಿದು ಫೋಟೋ ತೆಗೆಸಿದರು. ಬಳಿಕ ವಕೀಲರ ಕಚೇರಿಗೆ ಕರೆದೊಯ್ದು ದಾಖಲೆಗಳಿಗೆ ಸಹಿ ಹಾಕಿಸಿಕೊಂಡರು” ಎಂದು ಆರೋಪಿಸಿದ್ದಾನೆ.

ಅಷ್ಟೇ ಅಲ್ಲದೆ, “ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ನನ್ನನ್ನು ಇರಿಸಿಕೊಂಡು ಕೃಷಿ ಕೆಲಸ ಮಾಡಿಸುತ್ತಿದ್ದರು. ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ಅವರಿಗೆ ಮಸಾಜ್ ಮಾಡುವಂತೆ ಒತ್ತಾಯಿಸಲಾಗುತ್ತಿತ್ತು. ವಕೀಲರು ಹೇಳಿದಂತೆ ಕೋರ್ಟ್‌ನಲ್ಲಿ ಹೇಳಿಕೆ ನೀಡದಿದ್ದರೆ ಕೊಂದು ಅದೇ ಜಾಗದಲ್ಲಿ ಹೂಳುವುದಾಗಿ ಬೆದರಿಕೆ ಹಾಕುತ್ತಿದ್ದರು” ಎಂದು ಚಿನ್ನಯ್ಯ ಗಂಭೀರ ಆರೋಪ ಮಾಡಿದ್ದಾನೆ.

ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರನ್ನು ಉಲ್ಲೇಖಿಸಿರುವುದು ಪ್ರಕರಣದಲ್ಲಿ ಹೊಸ ಬೆಳವಣಿಗೆಯಾಗಿದೆ. “ಕೇರಳದ ರೆಸಾರ್ಟ್‌ನಲ್ಲಿ ಇದ್ದ ವೇಳೆ ರಾತ್ರಿ ನಟ ಪ್ರಕಾಶ್ ರಾಜ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿಸಲಾಯಿತು. ಅವರು ತಮಿಳಿನಲ್ಲಿ ಮಾತನಾಡಿ, ಗಿರೀಶ್ ಮಟ್ಟಣ್ಣವರ್ ಹೇಳಿದಂತೆ ಹೇಳಿಕೆ ನೀಡುವಂತೆ ಸೂಚಿಸಿದರು ಎಂದಿದ್ದಾನೆ. ಇದರ ಜೊತೆಗೆ, “ಕರ್ನಾಟಕ ಸರ್ಕಾರ SIT ರಚಿಸಿದಾಗ ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳುಹಿಸುವ ಸಮಯ ಬಂದಿದೆ ಎಂದು ಸಂಭ್ರಮಿಸಿದ್ದರು. ಇಡೀ ಯೋಜನೆಗೆ 200 ಕೋಟಿ ರೂ. ಬಜೆಟ್ ಇದ್ದು, ಸಹಕರಿಸಿದರೆ 50 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದ್ದರು” ಎಂಬ ಆರೋಪವನ್ನೂ ಅರ್ಜಿಯಲ್ಲಿ ದಾಖಲಿಸಲಾಗಿದೆ.

 “SITಗೆ ತೋರಿಸಲು ಕೆಲವು ನಿರ್ದಿಷ್ಟ ಸ್ಥಳಗಳನ್ನು ಗುರುತಿಸಿ ಕೊಟ್ಟಿದ್ದರು. ಆ ಜಾಗಗಳಲ್ಲಿ ಶವಗಳ ಅವಶೇಷ ಸಿಗದಿದ್ದರೂ ಅದೇ ಸ್ಥಳಗಳನ್ನು ತೋರಿಸುವಂತೆ ಒತ್ತಾಯಿಸಿದರು. ಹೇಳಿದಂತೆ ಮಾಡದಿದ್ದರೆ ಪತ್ನಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಈ ಎಲ್ಲ ಬೆಳವಣಿಗೆಗಳಿಂದ ಭಯಗೊಂಡು ಕೊನೆಗೆ ನಿಜಾಂಶವನ್ನು SIT ಮುಂದೆ ಬಹಿರಂಗಪಡಿಸಿದ್ದೇನೆ” ಎಂದು ಚಿನ್ನಯ್ಯ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ. ತನ್ನ ಹೇಳಿಕೆ ಬಳಿಕವೂ ಷಡ್ಯಂತ್ರ ರೂಪಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಚಿನ್ನಯ್ಯ, ತನ್ನನ್ನು ಮಾತ್ರ ಬಲಿಪಶು ಮಾಡಲಾಗಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾನೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರ ಮತ್ತು SITಗೆ ನೋಟಿಸ್ ಜಾರಿ ಮಾಡಿದ್ದು, ಜೂನ್ 29ರೊಳಗೆ ತನಿಖೆಯ ಪ್ರಗತಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ನಟ ಪ್ರಕಾಶ್ ರಾಜ್ ಸ್ಪಷ್ಟನೆ

ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಮೇಲೆ ಬಂದಿರುವ ಆರೋಪ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ನಟ ಪ್ರಕಾಶ್ ರಾಜ್ ಸ್ಪಷ್ಟನೆ ನೀಡಿದ್ದಾರೆ. “ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಗ್ಗೆ ಕೆಲವು ಸುದ್ದಿಗಳು ಹರಿದಾಡುತ್ತಿವೆ. ಇದು ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು, ಕೋಟ್ಯಂತರ ಭಕ್ತರ ನಂಬಿಕೆಗೆ ಸಂಬಂಧಿಸಿದೆ. ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡುವುದು ನನ್ನ ಕರ್ತವ್ಯ” ಎಂದು ಹೇಳಿದ್ದಾರೆ.

“ನಾನು ಸದ್ಯ ಊರಿನಲ್ಲಿ ಇಲ್ಲ. ಇನ್ನೆರಡು ದಿನಗಳಲ್ಲಿ ಖುದ್ದಾಗಿ ಮಾಧ್ಯಮಗಳ ಮುಂದೆ ಬಂದು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮಗ್ರ ಪ್ರತಿಕ್ರಿಯೆ ನೀಡುತ್ತೇನೆ. ಅಲ್ಲಿಯವರೆಗೆ ನನ್ನ ಬಗ್ಗೆ ಹರಿದಾಡುತ್ತಿರುವ ಗಾಳಿ ಸುದ್ದಿಗಳನ್ನು ಯಾರೂ ನಂಬಬೇಡಿ” ಎಂದು ಪ್ರಕಾಶ್ ರಾಜ್ ಮನವಿ ಮಾಡಿದ್ದಾರೆ.

ಚಿನ್ನಯ್ಯನ ಈ ಹೊಸ ಆರೋಪಗಳು ಮತ್ತು ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದು ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಹೊಸ ಆಯಾಮ ನೀಡಿದ್ದು, ಮುಂದಿನ ದಿನಗಳಲ್ಲಿ SIT ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.