ಧರ್ಮಸ್ಥಳ ವಿರುದ್ಧ ಆರೋಪ ; ಜನಾರ್ದನ ರೆಡ್ಡಿಗೆ ಕೋರ್ಟ್ ಸಮನ್ಸ್, ಆ.24ಕ್ಕೆ ಖುದ್ದು ಹಾಜರಾಗಲು ಆದೇಶ

29-07-26 01:52 pm       HK News Staffer   ಕರ್ನಾಟಕ

ಧರ್ಮಸ್ಥಳದ ಕುರಿತು ನೀಡಿದ್ದ ಹೇಳಿಕೆ ಹಾಗೂ ತಮಿಳುನಾಡು ಸಂಸದ ಶಶಿಕಾಂತ್ ಸೆಂಥಿಲ್ ವಿರುದ್ಧ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದಂತೆ, ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಶಶಿಕಾಂತ್ ಸೆಂಥಿಲ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಪರಿಗಣಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ರೆಡ್ಡಿಗೆ ಸಮನ್ಸ್ ಜಾರಿಗೊಳಿಸಿ ಆಗಸ್ಟ್ 24ರಂದು ಖುದ್ದು ಹಾಜರಾಗುವಂತೆ ಆದೇಶಿಸಿದೆ.

ಬೆಂಗಳೂರು, ಜುಲೈ 29:  ಧರ್ಮಸ್ಥಳದ ಕುರಿತು ನೀಡಿದ್ದ ಹೇಳಿಕೆ ಹಾಗೂ ತಮಿಳುನಾಡು ಸಂಸದ ಶಶಿಕಾಂತ್ ಸೆಂಥಿಲ್ ವಿರುದ್ಧ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದಂತೆ, ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಶಶಿಕಾಂತ್ ಸೆಂಥಿಲ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಪರಿಗಣಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ರೆಡ್ಡಿಗೆ ಸಮನ್ಸ್ ಜಾರಿಗೊಳಿಸಿ ಆಗಸ್ಟ್ 24ರಂದು ಖುದ್ದು ಹಾಜರಾಗುವಂತೆ ಆದೇಶಿಸಿದೆ.

ಧರ್ಮಸ್ಥಳಕ್ಕೆ ಕಳಂಕ ತರುವ ಷಡ್ಯಂತ್ರದ ಹಿಂದಿನ ರೂವಾರಿ ಶಶಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಸಾರ್ವಜನಿಕವಾಗಿ ಆರೋಪಿಸಿದ್ದರು. ಅಲ್ಲದೆ, ಬುರುಡೆ ಚಿನ್ನಯ್ಯನಿಗೆ ಆಶ್ರಯ ನೀಡುವ ಮೂಲಕ ಈ ಸಂಚಿನ ಭಾಗವಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಹೇಳಿಕೆಗಳು ತಮ್ಮ ಘನತೆಗೆ ಧಕ್ಕೆ ತಂದಿವೆ ಎಂದು ಆರೋಪಿಸಿ ತಿರುವಳ್ಳೂರು ಲೋಕಸಭಾ ಕ್ಷೇತ್ರದ ಸಂಸದ ಶಶಿಕಾಂತ್ ಸೆಂಥಿಲ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂದೀಪ್ ಪಾಟೀಲ್, ದೂರಿನಲ್ಲಿರುವ ಆರೋಪಗಳನ್ನು ಪರಿಶೀಲಿಸಿ ಪ್ರಕರಣವನ್ನು ಪರಿಗಣನೆಗೆ ತೆಗೆದುಕೊಂಡಿದ್ದಾರೆ. ಬಳಿಕ ಆರೋಪಿ ಜನಾರ್ದನ ರೆಡ್ಡಿಗೆ ಸಮನ್ಸ್ ಜಾರಿಗೊಳಿಸಿ, ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿದ್ದಾರೆ.

ತಮ್ಮ ದೂರಿನಲ್ಲಿ ಶಶಿಕಾಂತ್ ಸೆಂಥಿಲ್, "ಜನಾರ್ದನ ರೆಡ್ಡಿ ಅವರು ರಾಜಕೀಯ ದ್ವೇಷದಿಂದ ನನ್ನ ಹೆಸರನ್ನು ಉಲ್ಲೇಖಿಸಿ ಆಧಾರರಹಿತ ಹಾಗೂ ಸುಳ್ಳು ಆರೋಪಗಳನ್ನು ಮಾಡಿದ್ದಾರೆ" ಎಂದು ತಿಳಿಸಿದ್ದಾರೆ.

ಇದೇ ವೇಳೆ, ತಾವು ಈ ಹಿಂದೆ ಬಳ್ಳಾರಿ ಜಿಲ್ಲೆಯಲ್ಲಿ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಶಾಸಕರಾಗಿದ್ದರು. ಆ ಅವಧಿಯಲ್ಲಿ ಬಳ್ಳಾರಿಯ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸಬಲೀಕರಣ ಸಮಿತಿ (CEC) ಹಾಗೂ ಸಿಬಿಐಗೆ ಸಹಕಾರ ನೀಡಿದ್ದೆ. ಹಲವು ಅಕ್ರಮಗಳನ್ನು ಬಯಲಿಗೆಳೆದಿದ್ದರಿಂದಲೇ ಜನಾರ್ದನ ರೆಡ್ಡಿ ತಮ್ಮ ವಿರುದ್ಧ ವೈಯಕ್ತಿಕ ದ್ವೇಷ ಬೆಳೆಸಿಕೊಂಡಿದ್ದಾರೆ ಎಂದು ಸೆಂಥಿಲ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಬೆಳವಣಿಗೆಯೊಂದಿಗೆ ಧರ್ಮಸ್ಥಳ ಕುರಿತ ಹೇಳಿಕೆ ಇದೀಗ ಕಾನೂನು ಹಾದಿ ಹಿಡಿದಿದ್ದು, ಮುಂದಿನ ವಿಚಾರಣೆಯಲ್ಲಿ ಪ್ರಕರಣ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ನ್ಯಾಯಾಲಯದ ಆದೇಶದಂತೆ ಆಗಸ್ಟ್ 24ರಂದು ಜನಾರ್ದನ ರೆಡ್ಡಿ ಖುದ್ದು ಹಾಜರಾಗುವ ಸಾಧ್ಯತೆಯಿದೆ.