ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತರ ಸಮಾಧಾನಿಸಲು ಸುರ್ಜೇವಾಲಾ ಎಂಟ್ರಿ, ಸ್ಥಾನ ಸಿಗದ ಹಿರಿಯ ನಾಯಕರು ದೆಹಲಿಗೆ ದೌಡು, ಮಹಿಳಾ ಕೋಟಾ ಖಾಲಿ ಬಗ್ಗೆ ತೀವ್ರ ಚರ್ಚೆ

07-08-26 04:18 pm       HK News Staffer   ಕರ್ನಾಟಕ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಅಸಮಾಧಾನ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು ಅತೃಪ್ತರನ್ನು ತಣ್ಣಗಾಗಿಸಲು ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸೂರ್ಜೇವಾಲಾ ಅಖಾಡಕ್ಕಿಳಿದಿದ್ದಾರೆ. ಪಕ್ಷದ ಹೈಕಮಾಂಡ್‌ ಜೊತೆ ಸಮಾಲೋಚನೆ ನಡೆಸಿದ ಬಳಿಕ ಅಸಮಾಧಾನಿತ ನಾಯಕರನ್ನು ಸಮಾಧಾನಪಡಿಸಲು ವಿಶೇಷ ಸೂತ್ರವನ್ನು ಪ್ರಕಟಿಸಲು ಚಿಂತನೆ ನಡೆಸುತ್ತಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ಬೆಂಗಳೂರು, ಆ.7: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಅಸಮಾಧಾನ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು ಅತೃಪ್ತರನ್ನು ತಣ್ಣಗಾಗಿಸಲು ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸೂರ್ಜೇವಾಲಾ ಅಖಾಡಕ್ಕಿಳಿದಿದ್ದಾರೆ. ಪಕ್ಷದ ಹೈಕಮಾಂಡ್‌ ಜೊತೆ ಸಮಾಲೋಚನೆ ನಡೆಸಿದ ಬಳಿಕ ಅಸಮಾಧಾನಿತ ನಾಯಕರನ್ನು ಸಮಾಧಾನಪಡಿಸಲು ವಿಶೇಷ ಸೂತ್ರವನ್ನು ಪ್ರಕಟಿಸಲು ಚಿಂತನೆ ನಡೆಸುತ್ತಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಹಲವು ಶಾಸಕರು ತಮ್ಮ ಅಸಮಾಧಾನವನ್ನು ನೇರವಾಗಿ ಸೂರ್ಜೇವಾಲಾ ಮುಂದೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಸಚಿವ ಸ್ಥಾನಕ್ಕೆ ಯಾರ್ಯಾರ ಹೆಸರುಗಳನ್ನು ಹೈಕಮಾಂಡ್‌ಗೆ ಕಳುಹಿಸಲಾಗಿತ್ತು ಹಾಗೂ ಕೊನೆಯ ಕ್ಷಣದಲ್ಲಿ ಏಕೆ ಕೆಲವರ ಹೆಸರು ಕೈಬಿಡಲಾಯಿತು ಎಂಬುದನ್ನು ಸೂರ್ಜೇವಾಲಾ ಶಾಸಕರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನ ವಂಚಿತರಾದ ನಾಯಕರಿಗೆ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಹುದ್ದೆಗಳು, ವಿವಿಧ ಮಂಡಳಿ ಹಾಗೂ ನಿಗಮಗಳ ಅಧ್ಯಕ್ಷ ಸ್ಥಾನಗಳನ್ನು ನೀಡುವ ಮೂಲಕ ಸಮಾಧಾನಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಅಹಿಂದ ವರ್ಗದ ಹಲವು ಶಾಸಕರು, ವಿಶೇಷವಾಗಿ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರಿಗೆ ನ್ಯಾಯ ಸಿಕ್ಕಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮನ್ನು ಸಮರ್ಪಕವಾಗಿ ಬೆಂಬಲಿಸಲಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಎಚ್.ಸಿ. ಮಹದೇವಪ್ಪ ದೆಹಲಿಗೆ ತೆರಳಿದ್ದು, ಕೇಂದ್ರ ನಾಯಕರನ್ನು ಭೇಟಿಯಾಗಲಿದ್ದಾರೆ. 

ಆರು ಬಾರಿ ಶಾಸಕರಾಗಿರುವ ಅಪ್ಪಾಜಿ ಸಿ.ಎಸ್. ನಾಡಗೌಡ ಕೂಡ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲು ಮುಂದಾಗಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಕೂಡ ದೆಹಲಿಯಲ್ಲಿದ್ದು, ಸಮಾಜ ಕಲ್ಯಾಣ ಖಾತೆಗಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಜಿ ಸಚಿವರಾದ ಮಂಕಾಳು ವೈದ್ಯ, ಆರ್.ಬಿ. ತಿಮ್ಮಾಪುರ, ಎನ್.ಎಸ್. ಬೋಸರಾಜು, ರಹೀಂ ಖಾನ್, ಬಿ.ಆರ್ ಪಾಟೀಲ್ ಸೇರಿದಂತೆ ಹಲವು ಹಿರಿಯ ನಾಯಕರು ಸಚಿವ ಸ್ಥಾನ ಸಿಗದ್ದಕ್ಕೆ ಬೇಸರಗೊಂಡಿದ್ದಾರೆ.

ಈ ನಡುವೆ ಅಸಮಾಧಾನಿತ ಶಾಸಕರ ಒಂದು ತಂಡ ಆಗಸ್ಟ್‌ 13ರಂದು ಮುಂಗಾರು ಅಧಿವೇಶನ ಆರಂಭವಾಗುವ ದಿನ ರಾತ್ರಿ ಒಟ್ಟು ಸೇರಲು ತೀರ್ಮಾನಿಸಿದೆ. ಮುಂದಿನ 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟು ತಮ್ಮ ಕ್ಷೇತ್ರಗಳಿಗೆ ಸಮರ್ಪಕ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಪಕ್ಷದ ನಾಯಕತ್ವದ ಮುಂದೆ ಇಡುವ ಸಾಧ್ಯತೆ ಇದೆ.

ಈ ನಡುವೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೊಪ್ಪಳದಲ್ಲಿ ರಾಘವೇಂದ್ರ ಹಿಟ್ನಾಳ್ ಬೆಂಬಲಿಗರು, ಬ್ಯಾಡಗಿಯಲ್ಲಿ ಬಸವರಾಜ ಶಿವಣ್ಣನವರ ಬೆಂಬಲಿಗರು, ಬಂಗಾರಪೇಟೆಯಲ್ಲಿ ಎಸ್.ಎನ್. ನಾರಾಯಣಸ್ವಾಮಿ ಬೆಂಬಲಿಗರು ಹಾಗೂ ಶ್ರೀರಂಗಪಟ್ಟಣದಲ್ಲಿ ರಮೇಶ್ ಬಂಡಿಸಿದ್ದೇಗೌಡ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕುರುಬ ಸಮುದಾಯದ ನಾಯಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ಸಿಗದಿರುವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ವೇಳೆ ಬಸವರಾಜ ರಾಯರೆಡ್ಡಿ ಅವರಿಗೆ ಸಿದ್ದರಾಮಯ್ಯ ಬೆಂಬಲ ನೀಡಿದ್ದರೂ, ಹಿಟ್ನಾಳ್ ಕಾರಣಕ್ಕೆ ಸಚಿವ ಸಂಪುಟ ವಿಸ್ತರಣೆಯ ಬಳಿಕ ಅವರು ಮೊದಲ ಬಾರಿಗೆ ಕೊಪ್ಪಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಿರೀಕ್ಷಿತ ಸ್ವಾಗತ ದೊರೆಯಲಿಲ್ಲ.

ಚಿಕ್ಕಮಗಳೂರು ವಿಧಾನ ಪರಿಷತ್ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಅವರ ಹೆಸರು ಕೊನೆಯ ಕ್ಷಣದವರೆಗೂ ಸಂಭಾವ್ಯ ಸಚಿವರ ಪಟ್ಟಿಯಲ್ಲಿದ್ದರೂ ಅಂತಿಮ ಪಟ್ಟಿಯಿಂದ ಕೈಬಿಟ್ಟಿದ್ದು ಕುರುಬ ಸಮುದಾಯದ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಭಾವದಿಂದ ಗಾಯತ್ರಿ ಹೆಸರು ಕೊನೆಯ ಹಂತದ ವರೆಗೂ ಉಳಿದಿತ್ತು ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ. ಆದರೆ ಕೊನೆಯ ವೇಳೆಗೆ ಸ್ವತಃ ಸಿದ್ದರಾಮಯ್ಯ ಅವರೇ ಗಾಯತ್ರಿಗೆ ಪ್ರಮಾಣವಚನ ಸ್ವೀಕರಿಸದಂತೆ ಸೂಚಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದ್ದು ತೀವ್ರ ಚರ್ಚೆಗೀಡಾಗಿದೆ.