ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ ಸೇರಿ ಎಲ್ಲ 23 ಆರೋಪಿಗಳ ಖುಲಾಸೆ, ಊಹೆಗಳ ಮೇಲೆ ಪ್ರಕರಣ ದಾಖಲಿಸುವಂತಿಲ್ಲ, ಸಿಬಿಐಗೆ ದೆಹಲಿ ಕೋರ್ಟ್ ಛೀಮಾರಿ !

27-02-26 03:55 pm       HK News Staffer   ದೇಶ - ವಿದೇಶ

ಮಹತ್ವದ ಬೆಳವಣಿಗೆಯಲ್ಲಿ ಭಾರೀ ಸಂಚಲನ ಎಬ್ಬಿಸಿದ್ದ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಕರಣದಲ್ಲಿ ಆರೋಪಿಗಳೆಂದು ಗುರುತಿಸಿದ್ದ ಎಲ್ಲ 23 ಮಂದಿಯನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.

ನವದೆಹಲಿ, ಫೆ.27: ಮಹತ್ವದ ಬೆಳವಣಿಗೆಯಲ್ಲಿ ಭಾರೀ ಸಂಚಲನ ಎಬ್ಬಿಸಿದ್ದ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಕರಣದಲ್ಲಿ ಆರೋಪಿಗಳೆಂದು ಗುರುತಿಸಿದ್ದ ಎಲ್ಲ 23 ಮಂದಿಯನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ಬಗ್ಗೆ ಸಿಬಿಐ ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ಯಾವುದೇ ಬಲವಾದ ಪುರಾವೆಗಳಿಲ್ಲ ಎಂದು ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಕೇವಲ ಊಹೆಗಳ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಅಬಕಾರಿ ನೀತಿ ರೂಪಿಸುವಲ್ಲಿ ಯಾವುದೇ ಕ್ರಿಮಿನಲ್ ಪಿತೂರಿ ಅಥವಾ ದುರುದ್ದೇಶ ಸಿಬಿಐ ಆರೋಪ ಪಟ್ಟಿಯಲ್ಲಿ ಕಂಡುಬಂದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಇದರೊಂದಿಗೆ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮಾತ್ರವಲ್ಲದೆ, ಬಿಆರ್‌ಎಸ್ ನಾಯಕಿ ಕೆ. ಕವಿತಾ, ವಿಜಯ್ ನಾಯರ್ ಸೇರಿದಂತೆ ದೋಷಾರೋಪ ಪಟ್ಟಿಯಲ್ಲಿದ್ದ ಎಲ್ಲರಿಗೂ ಈ ಮೂಲಕ ರಿಲೀಫ್  ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದ್ದಲ್ಲದೆ, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನಾಯಕರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ಸಿಬಿಐ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ನಾನು ಭ್ರಷ್ಟನಲ್ಲ, ಅತಿದೊಡ್ಡ ಪಿತೂರಿ ; ಕೇಜ್ರಿವಾಲ್:

ತೀರ್ಪು ಹೊರಬಿದ್ದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾವುಕರಾಗಿ ಕಣ್ಣೀರಿಟ್ಟರು. "ನಾನು ಭ್ರಷ್ಟನಲ್ಲ. ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರು ಪ್ರಾಮಾಣಿಕರು (ಕಟ್ಟರ್ ಇಮಂದಾರ್) ಎಂದು ಇಂದು ನ್ಯಾಯಾಲಯವೇ ಸಾಬೀತುಪಡಿಸಿದೆ. ಇದು ಸ್ವತಂತ್ರ ಭಾರತದ ಇತಿಹಾಸದಲ್ಲೇ ನಡೆದ ಅತಿದೊಡ್ಡ ರಾಜಕೀಯ ಪಿತೂರಿ" ಎಂದು ಅವರು ಹೇಳಿದರು.

2021-22ರ ದೆಹಲಿ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿತ್ತು. ಈ ಸಂಬಂಧ ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರು ಸುದೀರ್ಘ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಸದ್ಯ ಸಿಬಿಐ ಪ್ರಕರಣದಿಂದ ಇವರು ಮುಕ್ತರಾಗಿದ್ದು ಕೇಂದ್ರ ಸರ್ಕಾರದ ನಡೆ ಚರ್ಚೆಗೀಡು ಮಾಡಿದೆ.