ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದಿಗೊತ್ತಿ ಭರ್ಜರಿ ಮುನ್ನಡೆಯತ್ತ ಟಿವಿಕೆ, ಕೇರಳದಲ್ಲಿ ಯುಡಿಎಫ್ ನಾಗಾಲೋಟ, ದಾವಣಗೆರೆಯಲ್ಲಿ ಕಾಂಗ್ರೆಸ್ ಹಿನ್ನಡೆ !

04-05-26 11:11 am       HK News Staffer   ದೇಶ - ವಿದೇಶ

ಪಂಚ ರಾಜ್ಯಗಳ ಅಸೆಂಬ್ಲಿ ಮತ್ತು ರಾಜ್ಯದ ಬಾಗಲಕೋಟ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು ಭಾರೀ ಕುತೂಹಲ ವ್ಯಕ್ತವಾಗಿದೆ. ಮೊದಲ ಐದು ಸುತ್ತಿನ ಮತ ಎಣಿಕೆಯಲ್ಲಿ ಬಾಗಲಕೋಟ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭಾರೀ ಮುನ್ನಡೆ ಸಾಧಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹಾವು ಏಣಿಯಾಟ ಕಂಡುಬಂದಿದೆ.

ಬೆಂಗಳೂರು, ಮೇ 4: ಪಂಚ ರಾಜ್ಯಗಳ ಅಸೆಂಬ್ಲಿ ಮತ್ತು ರಾಜ್ಯದ ಬಾಗಲಕೋಟ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು ಭಾರೀ ಕುತೂಹಲ ವ್ಯಕ್ತವಾಗಿದೆ. ಮೊದಲ ಐದು ಸುತ್ತಿನ ಮತ ಎಣಿಕೆಯಲ್ಲಿ ಬಾಗಲಕೋಟ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭಾರೀ ಮುನ್ನಡೆ ಸಾಧಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹಾವು ಏಣಿಯಾಟ ಕಂಡುಬಂದಿದೆ. 

ಇದೇ ವೇಳೆ, ತಮಿಳುನಾಡಿನಲ್ಲಿ ಅಚ್ಚರಿ ಎನ್ನುವಂತೆ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 90ಕ್ಕೂ  ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಅಧಿಕಾರ ಸ್ಥಾಪಿಸುವ ಸುಳಿವು ನೀಡಿದೆ. ಡಿಎಂಕೆ 48 ಹಾಗೂ ಎಐಎಡಿಎಂಕೆ ಪಕ್ಷವು 59 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ. ಹೀಗಾಗಿ ಬಹುತೇಕ ತಮಿಳುನಾಡಿನಲ್ಲಿ ಟಿವಿಕೆ ಮತ್ತು ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಸೇರಿಕೊಂಡು ಸಮ್ಮಿಶ್ರ ಸರ್ಕಾರ ರಚಿಸುವ ಸಾಧ್ಯತೆ ಇದೆ. 

ಇದೇ ವೇಳೆ, ಕೇರಳದಲ್ಲಿ ಆಡಳಿತಾರೂಢ ಎಡರಂಗಕ್ಕೆ ತೀವ್ರ ಹಿನ್ನಡೆಯಾಗಿದೆ. ಎಡರಂಗ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್ 95 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿರುವುದು ಆರಂಭಿಕ‌ ಸುತ್ತಿನ ಮತ ಎಣಿಕೆಯಲ್ಲಿ ವ್ಯಕ್ತವಾಗಿದೆ. ಹೀಗಾಗಿ ಇಲ್ಲಿ ಬಹುತೇಕ ಯುಡಿಎಫ್ ಬಹುಮತದಿಂದ ಅಧಿಕಾರ ಹಿಡಿಯುವುದು ಪಕ್ಕಾ ಆಗಿದೆ. 

ಬಾಗಲಕೋಟ ಮತ್ತು ದಾವಣಗೆರೆ ಕ್ಷೇತ್ರಗಳಲ್ಲಿ ಆಡಳಿತರೂಢ ಕಾಂಗ್ರೆಸಿಗೆ ಹಿನ್ನಡೆಯಾಗುತ್ತದೆ ಎಂದು ಹೇಳಲಾಗಿದ್ದರೂ, ಸರ್ಕಾರದ ಪ್ರಮುಖ ಸಚಿವರೆಲ್ಲ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಕೆಲಸ ಮಾಡಿದ್ದರು. ದಾವಣಗೆರೆಯಲ್ಲಿ ಭಾರೀ ಬಂಡಾಯ ವ್ಯಕ್ತವಾದರೂ ಅದನ್ನು ಕೂಡ ಶಮನ ಮಾಡಿದ್ದರು. ಅದರ ನಡುವೆಯೂ ಪಕ್ಷ ವಿರೋಧಿ ಕೆಲಸ ಮಾಡಿದ್ದಕ್ಕಾಗಿ ಕೆಲವು ಮುಸ್ಲಿಂ ನಾಯಕರ ಮೇಲೆ ಕ್ರಮ ಜರುಗಿಸಲಾಗಿತ್ತು. ದಾವಣಗೆರೆ ಕ್ಷೇತ್ರದಲ್ಲಿ ಮೂರು ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ 2777 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಅವರನ್ನು ಹಿಂದಕ್ಕೆ ಹಾಕಿದ್ದಾರೆ. ಬಾಗಲಕೋಟ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 15 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.‌