NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ ; ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿಗೆ ಹೊಣೆ

26-07-26 01:32 pm       HK News Staffer   ದೇಶ - ವಿದೇಶ

ದೇಶಾದ್ಯಂತ ಭಾರಿ ಸಂಚಲನಕ್ಕೆ ಕಾರಣವಾಗಿದ್ದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಕೇಂದ್ರ ಸಚಿವ ಸಂಪುಟದಲ್ಲೇ ಮಹತ್ವದ ಬದಲಾವಣೆಗೆ ಕಾರಣವಾಗಿದೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಕರ್ನಾಟಕದ ಹಿರಿಯ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ನವದೆಹಲಿ, ಜುಲೈ 26: ದೇಶಾದ್ಯಂತ ಭಾರಿ ಸಂಚಲನಕ್ಕೆ ಕಾರಣವಾಗಿದ್ದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಕೇಂದ್ರ ಸಚಿವ ಸಂಪುಟದಲ್ಲೇ ಮಹತ್ವದ ಬದಲಾವಣೆಗೆ ಕಾರಣವಾಗಿದೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಕರ್ನಾಟಕದ ಹಿರಿಯ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಹೊಸ ಹೊಣೆಗಾರಿಕೆ ಸ್ವೀಕರಿಸಿದ ಬಳಿಕ ಪ್ರತಿಕ್ರಿಯಿಸಿದ ಜೋಶಿ, "ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲಿಟ್ಟಿರುವ ನಂಬಿಕೆಗೆ ಕೃತಜ್ಞನಾಗಿದ್ದೇನೆ. ಈ ಜವಾಬ್ದಾರಿಯನ್ನು ಸಂಪೂರ್ಣ ಕರ್ತವ್ಯ ಪ್ರಜ್ಞೆ ಹಾಗೂ ವಿನಮ್ರತೆಯಿಂದ ನಿರ್ವಹಿಸುತ್ತೇನೆ" ಎಂದು ಹೇಳಿದರು.
ದೇಶದ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಭರವಸೆ ನೀಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನುಷ್ಠಾನದಲ್ಲಿ ಧರ್ಮೇಂದ್ರ ಪ್ರಧಾನ್ ಅವರ ಕೊಡುಗೆಯನ್ನು ಶ್ಲಾಘಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಆರಂಭವಾಗಿರುವ ಸುಧಾರಣೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲಾಗುವುದು ಎಂದರು.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರಹ್ಲಾದ್ ಜೋಶಿ, ಪ್ರಸ್ತುತ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯಗಳ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಇದೀಗ ಈ ಇಲಾಖೆಗಳ ಜೊತೆಗೆ ದೇಶದ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನೂ ವಹಿಸಿಕೊಂಡಿದ್ದಾರೆ.

NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ, ದೇಶವ್ಯಾಪಿ ವಿದ್ಯಾರ್ಥಿ ಸಂಘಟನೆಗಳ ತೀವ್ರ ಪ್ರತಿಭಟನೆ ಮತ್ತು ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆ ಕುರಿತು ಮೂಡಿದ ಪ್ರಶ್ನೆಗಳ ನಡುವೆ ನಡೆದ ಈ ಬದಲಾವಣೆ ಮಹತ್ವ ಪಡೆದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯಲ್ಲಿ ಸುಧಾರಣೆ, ಪರೀಕ್ಷಾ ಪಾರದರ್ಶಕತೆ ಹಾಗೂ ವಿದ್ಯಾರ್ಥಿಗಳ ವಿಶ್ವಾಸ ಮರುಸ್ಥಾಪಿಸುವ ಸವಾಲು ಇದೀಗ ಪ್ರಹ್ಲಾದ್ ಜೋಶಿ ಅವರ ಮುಂದಿದೆ.