ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್ಕೆಗೆ ; ಡಿವೈಎಫ್ಐ ವಿರೋಧಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ, ಗ್ರಾಮೀಣರಿಗೂ ತಜ್ಞರ ಸೇವೆಯೆಂದು ಸಮರ್ಥನೆ, ವಿಪಕ್ಷ ಬಿಜೆಪಿಗರ ಮೌನ !

23-04-26 04:43 pm       HK News Staffer   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಲೂಕು ಆರೋಗ್ಯ ಕೇಂದ್ರಗಳ ನಿರ್ವಹಣೆಯನ್ನು ಖಾಸಗಿ ಆಸ್ಪತ್ರೆಗಳ ಆಡಳಿತಕ್ಕೆ ವಹಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಮ್ಯುನಿಸ್ಟ್ ಮತ್ತು ಡಿವೈಎಫ್ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ತಜ್ಞ ವೈದ್ಯರ ಸೇವೆ ಗ್ರಾಮೀಣ ಭಾಗದ ಜನರಿಗೂ ಸಿಗುವಂತಾಗಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಮರ್ಥನೆ ಮಾಡಿಕೊಂಡಿದೆ.

ಮಂಗಳೂರು, ಎ.23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಲೂಕು ಆರೋಗ್ಯ ಕೇಂದ್ರಗಳ ನಿರ್ವಹಣೆಯನ್ನು ಖಾಸಗಿ ಆಸ್ಪತ್ರೆಗಳ ಆಡಳಿತಕ್ಕೆ ವಹಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಮ್ಯುನಿಸ್ಟ್ ಮತ್ತು ಡಿವೈಎಫ್ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ತಜ್ಞ ವೈದ್ಯರ ಸೇವೆ ಗ್ರಾಮೀಣ ಭಾಗದ ಜನರಿಗೂ ಸಿಗುವಂತಾಗಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಮರ್ಥನೆ ಮಾಡಿಕೊಂಡಿದೆ.

ಸದ್ಯಕ್ಕೆ ಬೆಳ್ತಂಗಡಿ ತಾಲೂಕು ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಮೂಡುಬಿದಿರೆ ಆರೋಗ್ಯ ಕೇಂದ್ರ, ವಿಟ್ಲ ಸಮುದಾಯ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜು ಆಡಳಿತಕ್ಕೆ ಒಪ್ಪಿಸಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಕರಾರು ಮಾಡಿಕೊಂಡಿದ್ದು, ಇದಕ್ಕೆ ರಾಜ್ಯ ಸರಕಾರದ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಡಿವೈಎಫ್ಐ ಸಂಘಟನೆ, ತಾಲೂಕು ಆರೋಗ್ಯ ಕೇಂದ್ರಗಳನ್ನೂ ಖಾಸಗಿಯವರಿಗೆ ವಹಿಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಆರೋಗ್ಯ ಇಲಾಖೆಯನ್ನು ಖಾಸಗೀಕರಣಗೊಳಿಸುವ ಭಾಗ ಎಂದು ಟೀಕಿಸಿದ್ದಲ್ಲದೆ, ಎಪ್ರಿಲ್ 28ರಂದು ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದೆ. 

ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆ, ಗ್ರಾಮೀಣ ಭಾಗದ ಜನರಿಗೆ ವಿವಿಧ ತಜ್ಞ ವೈದ್ಯರ ಸೇವೆಗಳನ್ನು ಒದಗಿಸಲು ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ವಿಸ್ತರಿಸುವ ಸಲುವಾಗಿ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು. ಇದರಂತೆ, ಖಾಸಗಿ ವೈದ್ಯಕೀಯ ಕಾಲೇಜುಗಳು ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ನುರಿತ ತಜ್ಞರ ಸೇವೆಯನ್ನು, ಅರೆ ವೈದ್ಯಕೀಯ ಸಿಬ್ಬಂದಿಗಳ ಸೇವೆಯನ್ನು, ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ಹಾಗೂ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಒದಗಿಸಲಿದೆ. ಇದರಿಂದ ಸ್ಥಳೀಯ ಮಟ್ಟದಲ್ಲೇ ತಜ್ಞ ವೈದ್ಯರ ಚಿಕಿತ್ಸೆ ಮತ್ತು ಸುಧಾರಿತ ರೋಗ ನಿರ್ಣಯ ಸೌಲಭ್ಯಗಳು ಉಚಿತವಾಗಿ ದೊರೆಯಲಿವೆ. ಆದರೆ ಆರೋಗ್ಯ ಕೇಂದ್ರಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಪರ್ದಿಯಲ್ಲೇ ಇರಲಿದ್ದು, ಖಾಸಗಿ ಸಂಸ್ಥೆಯವರು ಕೇವಲ ವೈದ್ಯಕೀಯ ಸೇವೆಯನ್ನು ಮಾತ್ರ ನೀಡಲಿದೆ. ಇಲಾಖೆಯ ಯಾವುದೇ ಸ್ವತ್ತುಗಳನ್ನು ಮಾರಾಟ ಮಾಡುತ್ತಿರುವುದಿಲ್ಲ ಎಂದು ಹೇಳಿದೆ. 

ಈಗಾಗಲೇ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಮತ್ತು ಸರಕಾರಿ ಲೇಡಿಗೋಷನ್ ಆಸ್ಪತ್ರೆಯನ್ನು ಕೆ.ಎಂ.ಸಿ ಆಸ್ಪತ್ರೆಯ ನಿರ್ವಹಣೆಗೆ ನೀಡಿದ್ದು, ಉತ್ತಮ ಗುಣಮಟ್ಟದ ಸೂಪರ್ ಸ್ಪೆಷಾಲಿಟಿ ಮಟ್ಟದ ಆಸ್ಪತ್ರೆಗಳಲ್ಲಿ ಲಭ್ಯವಿರುವ ನುರಿತ ತಜ್ಞರ ಮತ್ತು ಇತರೆ ಅರೆ ವೈದ್ಯಕೀಯ ಸಿಬ್ಬಂದಿಗಳ ಸೇವೆಗಳು ಸಾರ್ವಜನಿಕರಿಗೆ ಉಚಿತವಾಗಿ ಲಭಿಸುತ್ತಿದೆ. ಖಾಸಗಿ ವಲಯದಲ್ಲಿ ನುರಿತ ತಜ್ಞರ ಸೇವೆಗೆ ದುಬಾರಿ ಮೊತ್ತವನ್ನು ಪಾವತಿಸಬೇಕಿದ್ದು, ವೆನ್ಲಾಕ್ ಆಸ್ಪತ್ರೆಯಲ್ಲಿ ಉಚಿತ ಪಡೆಯಬಹುದಾಗಿದೆ. ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಗೆ ಆಸುಪಾಸಿನ ಹತ್ತಾರು ಜಿಲ್ಲೆಗಳಿಂದಲ್ಲದೆ ನೆರೆಯ ಕೇರಳ ರಾಜ್ಯದಿಂದಲೂ ರೋಗಿಗಳು ಬರುತ್ತಿದ್ದಾರೆ.

ಇದೇ ರೀತಿ ತಾಲೂಕು ಮಟ್ಟದಲ್ಲೂ ಉತ್ತಮ ಆರೋಗ್ಯ ಸೇವೆ ಲಭಿಸುವುದಕ್ಕಾಗಿ ಮೂಡುಬಿದಿರೆ, ವಿಟ್ಲ, ಬಂಟ್ವಾಳ ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗೆ ವಹಿಸಲು ಒಡಂಬಡಿಕೆಯನ್ನು ನಡೆಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ತಾಲೂಕು ಆಸ್ಪತ್ರೆ ಖಾಸಗೀಕರಣ ಮಾಡಲಾಗುತ್ತಿದ್ದು ಮುಂದೆ ರಾಜ್ಯದೆಲ್ಲೆಡೆ ನಿರ್ವಹಣೆಯನ್ನು ಖಾಸಗಿ ತೆಕ್ಕೆಗೆ ಕೊಟ್ಟು ಕೈತೊಳೆದುಕೊಳ್ಳಲು ಸರ್ಕಾರ ಮುಂದಾಗಿದೆ. ಕಾಂಗ್ರೆಸ್ ಆಡಳಿತವು ಈ ಕುರಿತು ಗಂಭೀರ ಚಿಂತನೆ ನಡೆಸಿದ್ದರೆ ಪ್ರತಿಪಕ್ಷವಾಗಿ ಬಿಜೆಪಿಗರು ಮೌನ ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಬಿಜೆಪಿ ಶಾಸಕರಿದ್ದರೂ ಮೌನಕ್ಕೆ ಶರಣಾಗಿದ್ದಾರೆ. ‌ಕೇಂದ್ರ ಸರ್ಕಾರ, ಅಧೀನದ ಸರ್ಕಾರಿ ಸಂಸ್ಥೆಗಳನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡುತ್ತಿದ್ದರೆ, ಇತ್ತ ಕರ್ನಾಟಕ ರಾಜ್ಯದಲ್ಲಿ ಜನಸಾಮಾನ್ಯರ ಆಸರೆಯಾಗಿರುವ ಆರೋಗ್ಯ ಇಲಾಖೆಯನ್ನೇ ಖಾಸಗಿ ಕೈಗೆ ಕೊಡಲು ಮುಂದಾಗಿದೆ.‌