ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆದುಕೊಂಡ ಅಪರೂಪದ ಮಾರ್ಗದರ್ಶಕ’, ಯು.ಟಿ. ಖಾದರ್ ಸಂತಾಪ

23-06-26 06:02 pm       HK News Staffer   ಕರಾವಳಿ

ಮಂಗಳೂರಿನ ಖಾಝಿಯಾಗಿ ಸೇವೆ ಸಲ್ಲಿಸಿ ಮುಸ್ಲಿಂ ಸಮುದಾಯದ ಧಾರ್ಮಿಕ ಹಾಗೂ ಸಾಮಾಜಿಕ ಬದುಕಿಗೆ ಮಹತ್ವದ ಕೊಡುಗೆ ನೀಡಿದ್ದ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದ ಸುದ್ದಿ ತಿಳಿದು ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಂಗಳೂರು , ಜೂ.23: ಮಂಗಳೂರಿನ ಖಾಝಿಯಾಗಿ ಸೇವೆ ಸಲ್ಲಿಸಿ ಮುಸ್ಲಿಂ ಸಮುದಾಯದ ಧಾರ್ಮಿಕ ಹಾಗೂ ಸಾಮಾಜಿಕ ಬದುಕಿಗೆ ಮಹತ್ವದ ಕೊಡುಗೆ ನೀಡಿದ್ದ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದ ಸುದ್ದಿ ತಿಳಿದು ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶೋಕ ಸಂದೇಶ ಬಿಡುಗಡೆ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ಹಲವು ದಶಕಗಳ ಕಾಲ ಧಾರ್ಮಿಕ ಮಾರ್ಗದರ್ಶನ ನೀಡಿದ ಮುಸ್ಲಿಯಾರ್ ಅವರು ತಮ್ಮ ಸಂಪೂರ್ಣ ಜೀವನವನ್ನು ಧರ್ಮ, ಶಿಕ್ಷಣ ಹಾಗೂ ಸಮಾಜ ಸೇವೆಗೆ ಸಮರ್ಪಿಸಿದ್ದರು ಎಂದು ಸ್ಮರಿಸಿದ್ದಾರೆ. ಅವರ ಮಾರ್ಗದರ್ಶನದಿಂದ ಸಾವಿರಾರು ಜನರು ಸನ್ಮಾರ್ಗದಲ್ಲಿ ಸಾಗಿದ್ದು, ಸಮಾಜದಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವಲ್ಲಿ ಅವರು ಮಹತ್ತರ ಪಾತ್ರ ವಹಿಸಿದ್ದರು ಎಂದು ತಿಳಿಸಿದ್ದಾರೆ.

ಮುಸ್ಲಿಯಾರ್ ಅವರ ಸರಳ ವ್ಯಕ್ತಿತ್ವ, ಆಳವಾದ ಧಾರ್ಮಿಕ ಜ್ಞಾನ, ಮಾನವೀಯ ಮೌಲ್ಯಗಳು ಹಾಗೂ ಸಮನ್ವಯದ ಮನೋಭಾವ ಎಲ್ಲರಿಗೂ ಮಾದರಿಯಾಗಿತ್ತು. ಧಾರ್ಮಿಕ ನಾಯಕರಾಗಿದ್ದರೂ ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ಅವರು, ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶವನ್ನು ನಿರಂತರವಾಗಿ ಸಾರುತ್ತಿದ್ದರು ಎಂದು ಯು.ಟಿ. ಖಾದರ್ ಹೇಳಿದ್ದಾರೆ.

ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ಧಾರ್ಮಿಕ ಮೌಲ್ಯಗಳು ಹಾಗೂ ಸಾಮಾಜಿಕ ಏಕತೆಯನ್ನು ಬಲಪಡಿಸುವಲ್ಲಿ ಅವರು ವಹಿಸಿದ್ದ ಪಾತ್ರ ಸದಾ ಸ್ಮರಣೀಯವಾಗಿರಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲಾಹ್ ತಆಲಾ ಅವರು ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರಿಗೆ ಜನ್ನತುಲ್ ಫಿರ್ದೌಸ್‌ನಲ್ಲಿ ಉನ್ನತ ಸ್ಥಾನವನ್ನು ಕರುಣಿಸಲಿ ಹಾಗೂ ಅವರ ಕುಟುಂಬಸ್ಥರು, ಶಿಷ್ಯರು, ಅಭಿಮಾನಿಗಳು ಮತ್ತು ಅಪಾರ ಸಂಖ್ಯೆಯ ಅನುಯಾಯಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಯು.ಟಿ. ಖಾದರ್ ಪ್ರಾರ್ಥಿಸಿದ್ದಾರೆ.

2010ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿಯಾಗಿ ಅವರು ಅಧಿಕಾರ ಸ್ವೀಕರಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೇರಳ ರಾಜ್ಯದ 200ಕ್ಕೂ ಅಧಿಕ ಜಮಾಅತ್ ಗಳ ಖಾಝಿಯಾಗಿದ್ದರು.

ಮಂಗಳೂರಿನ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜುಮಾ ಮಸೀದಿ ಪ್ರಮುಖರು ತಿಳಿಸಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.