‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹೊಸ ರಾಜಕೀಯ ಪಕ್ಷ ಘೋಷಿಸಿದ ನಟ ಚೇತನ್

08-08-26 12:13 pm       HK News Staffer   ಕರಾವಳಿ

ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ ಅವರು ‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಜನರ ಮೂಲಭೂತ ಸಮಸ್ಯೆಗಳನ್ನು ಅರಿತುಕೊಂಡು, ಅವುಗಳ ಪರಿಹಾರಕ್ಕಾಗಿ ಜನಾಂದೋಲನ ರೂಪಿಸುವುದಾಗಿ ಅವರು ತಿಳಿಸಿದ್ದಾರೆ.

ಭಟ್ಕಳ , ಆ. 8: ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ ಅವರು ‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಜನರ ಮೂಲಭೂತ ಸಮಸ್ಯೆಗಳನ್ನು ಅರಿತುಕೊಂಡು, ಅವುಗಳ ಪರಿಹಾರಕ್ಕಾಗಿ ಜನಾಂದೋಲನ ರೂಪಿಸುವುದಾಗಿ ಅವರು ತಿಳಿಸಿದ್ದಾರೆ.

ಭಟ್ಕಳದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಚೇತನ್, ಭ್ರಷ್ಟಾಚಾರದ ವಿರುದ್ಧ ಹೋರಾಟ ಹಾಗೂ ಪರಿಸರ ಸಂರಕ್ಷಣೆ ತಮ್ಮ ಹೊಸ ರಾಜಕೀಯ ಪಕ್ಷದ ಪ್ರಮುಖ ಆದ್ಯತೆಗಳಾಗಲಿವೆ ಎಂದರು.

ಶರಾವತಿ ಯೋಜನೆಗೆ ವಿರೋಧ;

ಸಾವಿರಾರು ಕೋಟಿ ರೂಪಾಯಿ ವೆಚ್ಚದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಚೇತನ್ ಆತಂಕ ವ್ಯಕ್ತಪಡಿಸಿದರು. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಹಾನಿ ಉಂಟುಮಾಡುವ ಯೋಜನೆಗಳನ್ನು ಸರ್ಕಾರ ಮರುಪರಿಶೀಲಿಸಬೇಕು. ಪರಿಸರಕ್ಕೆ ಕಡಿಮೆ ಹಾನಿಯಾಗುವ ಸೌರಶಕ್ತಿ ಸೇರಿದಂತೆ ಪರ್ಯಾಯ ವಿದ್ಯುತ್ ಉತ್ಪಾದನಾ ವಿಧಾನಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಸಂಪುಟ ವಿಸ್ತರಣೆಯಲ್ಲೂ ಅಸಮಾಧಾನ;

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕರಾವಳಿ ಭಾಗ ಹಾಗೂ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ದೊರೆತಿಲ್ಲ ಎಂದು ಚೇತನ್ ಅಸಮಾಧಾನ ವ್ಯಕ್ತಪಡಿಸಿದರು. ‘ಪರಿವರ್ತನಾ ಪರಿಸರವಾದ’ದ ಆಧಾರದ ಮೇಲೆ ರಾಜ್ಯದಲ್ಲಿ ಹೊಸ ರಾಜಕೀಯ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿರುವುದಾಗಿ ಅವರು ಹೇಳಿದರು.

ಕಾವೇರಿ ವಿಚಾರಕ್ಕೆ ಸೌಹಾರ್ದಯುತ ಪರಿಹಾರ;

ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ರೈತರ ಹಿತವನ್ನು ಕಾಪಾಡುವ ರೀತಿಯಲ್ಲಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕು ಎಂದು ಚೇತನ್ ಸಲಹೆ ನೀಡಿದರು. ಇದೇ ವೇಳೆ ಟೊಂಕಾ ಬಂದರು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಗಳು ಈಡೇರಿಲ್ಲ ಎಂದು ಅವರು ಆರೋಪಿಸಿದರು.