ಉಜಿರೆ ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜು ಬಳಿ ಕಾಡಾನೆ ಪ್ರತ್ಯಕ್ಷ ; ಆನೆಯನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಹರಸಾಹಸ !

06-09-26 01:14 pm       HK News Desk   ಕರಾವಳಿ

ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪ ಕಾಡಾನೆ ಪ್ರತ್ಯಕ್ಷಗೊಂಡಿದ್ದು, ಸ್ಥಳೀಯರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ.

ಬೆಳ್ತಂಗಡಿ, ಸೆ. 6: ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪ ಕಾಡಾನೆ ಪ್ರತ್ಯಕ್ಷಗೊಂಡಿದ್ದು, ಸ್ಥಳೀಯರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ.

ಉಜಿರೆಯ ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜಿನ ಪಕ್ಕದಲ್ಲಿರುವ ಅರಣ್ಯ ಪ್ರದೇಶದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಅರಣ್ಯ ಪ್ರದೇಶದಿಂದ ಹೊರಬಂದ ಆನೆ ಕಾಲೇಜು ಸುತ್ತಮುತ್ತ ಸಂಚರಿಸುತ್ತಿರುವುದು ಕಂಡುಬಂದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಧಾವಿಸಿದ್ದು, ಆನೆಯನ್ನು ಸುರಕ್ಷಿತವಾಗಿ ಕಾಡಿಗೆ ಅಟ್ಟಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಆನೆ ಕಾಡಿನೊಳಗೆ ತೆರಳದೆ ಸುತ್ತಮುತ್ತಲೇ ತಿರುಗಾಡುತ್ತಿರುವುದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಮಂಗಳೂರು ಆನೆ ಕಾರ್ಯಪಡೆಯ ಸಿಬ್ಬಂದಿಯೂ ಆಗಮಿಸಿದ್ದು, ಆನೆಯನ್ನು ಕಾಡಿಗೆ ಮರಳಿಸುವ ಪ್ರಯತ್ನ ಮುಂದುವರಿದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳೀಯರು ಹಾಗೂ ಸಾರ್ವಜನಿಕರು ಆನೆಯ ಸಮೀಪ ತೆರಳದಂತೆ ಅರಣ್ಯ ಇಲಾಖೆ ಸೂಚಿಸಿದೆ.