ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್ಜೆ: ಸೆ.18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ: ‘ಮಾತೆರೆಗ್ಲ ಸೊಲ್ಮೆಲು’ ಎಂದು ವಿಡಿಯೋ ಸಂದೇಶ ಹರಿಬಿಟ್ಟ ಮುಖ್ಯಮಂತ್ರಿ

15-09-26 09:46 am       HK News Staffer   ಕರಾವಳಿ

ಕರಾವಳಿ ಜಿಲ್ಲೆಗಳ, ವಿಶೇಷವಾಗಿ ತುಳುನಾಡಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದೆ. ಈ ಕುರಿತು ಡಿ.ಕೆ. ಶಿವಕುಮಾರ್ ಎಕ್ಸ್‌ ತಾಣದಲ್ಲಿ ವಿಡಿಯೋ ಸಂದೇಶದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 15: ಕರಾವಳಿ ಜಿಲ್ಲೆಗಳ, ವಿಶೇಷವಾಗಿ ತುಳುನಾಡಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದೆ. ಈ ಕುರಿತು ಡಿ.ಕೆ. ಶಿವಕುಮಾರ್ ಎಕ್ಸ್‌ ತಾಣದಲ್ಲಿ ವಿಡಿಯೋ ಸಂದೇಶದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರಾವಳಿಯ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ಅರಿತುಕೊಂಡು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಸ್ಥಳದಲ್ಲೇ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವುದು ವಿಶೇಷ ಸಭೆಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಬಂದರು, ಮೀನುಗಾರಿಕೆ, ಕೈಗಾರಿಕೆಗೆ ನವಚೈತನ್ಯ

ಕರಾವಳಿ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಬಂದರು, ಮೂಲಸೌಕರ್ಯ, ಮೀನುಗಾರಿಕೆ ಹಾಗೂ ಕೈಗಾರಿಕಾ ಕ್ಷೇತ್ರಗಳಿಗೆ ನವಚೈತನ್ಯ ತುಂಬುವ ಮೂಲಕ ಕರಾವಳಿಯ ಸಮಗ್ರ ಸಮೃದ್ಧಿಗೆ ಹೊಸ ಮುನ್ನುಡಿ ಬರೆಯಲು ‘ಟೀಮ್ ಕರ್ನಾಟಕ’ ಸಜ್ಜಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆದು, ಮಹತ್ವದ ನಿರ್ಧಾರಗಳು ಹೊರಬರುವ ನಿರೀಕ್ಷೆ ಇದೆ. ವಿಡಿಯೋ ಸಂದೇಶದ ಕೊನೆಯಲ್ಲಿ ಡಿ.ಕೆ. ಶಿವಕುಮಾರ್ ತುಳು ಭಾಷೆಯಲ್ಲಿ “ಮಾತೆರೆಗ್‌ಲ ಸೊಲ್ಮೆಲು” (ಎಲ್ಲರಿಗೂ ವಂದನೆಗಳು) ಎಂದು ಹೇಳುವ ಮೂಲಕ ಕರಾವಳಿ ಭಾಗದ ಜನರಿಗೆ ತುಳುವಿನಲ್ಲೇ ಶುಭಾಶಯ ತಿಳಿಸಿದ್ದಾರೆ.