ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅತಿಥಿ ; ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರ ಪ್ರತಿಭಟನೆ, ಪೊಲೀಸ್ ವಶಕ್ಕೆ

30-03-22 11:51 am       Mangalore Correspondent   ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಕೊಣಾಜೆ ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರು, ಮಾ.30: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಕೊಣಾಜೆ ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮೆರವಣಿಗೆಯಲ್ಲಿ ನಡೆದು ಬಂದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳನ್ನು ಪೊಲೀಸರು ವಿವಿಯ ಪ್ರವೇಶ ದ್ವಾರದಲ್ಲಿ ತಡೆದಿದ್ದಾರೆ. ಹೀಗಾಗಿ ಆವರಣ ದ್ವಾರದಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದು ವಿಶ್ವವಿದ್ಯಾನಿಲಯದ ಆಡಳಿತ ಮತ್ತು ಕಲ್ಲಡ್ಕ ಪ್ರಭಾಕರ ಅವರಿಗೆ ಧಿಕ್ಕಾರ ಕೂಗಿದ್ದಾರೆ. ಮುತ್ತಿಗೆ ಹಿನ್ನೆಲೆಯಲ್ಲಿ ವಿವಿ ಕ್ಯಾಂಪಸ್ ಆವರಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

ಇದೇ ವೇಳೆ ಮಾತನಾಡಿದ ಕ್ಯಾಂಪಸ್ ಫ್ರಂಟ್ ನಾಯಕರು, ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಪೂರಿತ ಭಾಷಣ ಮಾಡುತ್ತಿದ್ದು ಜಿಲ್ಲೆಯಾದ್ಯಂತ ವಿವಿಧ ಠಾಣೆಗಳಲ್ಲಿ ಅವರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಇಂತಹ ವ್ಯಕ್ತಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ ಕಾರ್ಯಕ್ರಮಕ್ಕೆ ಯಾಕೆ ಕರೆಯಬೇಕು. ಅವರಿಂದಾಗಿ ವಿವಿ ಕ್ಯಾಂಪಸ್ ನಲ್ಲಿ ಶಾಂತಿ ಕದಡುವ ಸಾಧ್ಯತೆ ಇದೆಯೆಂದು ಆರೋಪಿಸಿ, ಪೊಲೀಸರ ತಡೆಯನ್ನು ಭೇದಿಸಿ ಒಳನುಗ್ಗಲು ಯತ್ನಿಸಿದ್ದಾರೆ. ಸ್ಥಳದಲ್ಲಿ 50ರಿಂದ 70ರಷ್ಟು ವಿದ್ಯಾರ್ಥಿಗಳು ಸೇರಿದ್ದು  ಕೆಲಹೊತ್ತು ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಜಟಾಪಟಿ ನಡೆಯಿತು.

ಬಳಿಕ ಪೊಲೀಸರು ಬಸ್ಸಿನಲ್ಲಿ ತುಂಬಿಸಿ, ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಒಂದಷ್ಟು ಮಂದಿ ಕಾರ್ಯಕರ್ತರು ಪೊಲೀಸರು ಬಂಧಿಸಲು ಮುಂದಾದಾಗ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕ್ಯಾಂಪಸ್ ಪ್ರವೇಶ ದ್ವಾರದಲ್ಲಿ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದ್ದಂತೆಯೇ ಮತ್ತೊಂದು ಕಡೆಯಿಂದ ಕ್ಯಾಂಪಸಿನ ಸಭಾಂಗಣಕ್ಕೆ ಬಂದ ಕಲ್ಲಡ್ಕ ಪ್ರಭಾಕರ ಭಟ್ಟರು ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಕಲ್ಲಡ್ಕ ಭಟ್ ಉದ್ಘಾಟಕರಾಗಿದ್ದರೆ ಉಪ ಕುಲಪತಿ ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು.

Campus front of India gherao Mangalore University for inviting Kalladka Prabhakar Bhat for event. More than 50 to 70 student Protesters were taken into custody by police.